ಬೆಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳ ಮೇಲೆ ಶೇಕಡಾ 50 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಪ್ರಾಧಿಕಾರ ಘೋಷಿಸಿದೆ. ಪುಸ್ತಕ ಪ್ರಿಯರು ಈ ಅಪೂರ್ವ ಅವಕಾಶವನ್ನು ಬಳಸಿಕೊಳ್ಳುವಂತೆ ಕೋರಲಾಗಿದೆ.
ಈ ರಿಯಾಯಿತಿ ಸೌಲಭ್ಯ ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ: 080-22107705), ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಲಭ್ಯವಿರುತ್ತದೆ. ಅಲ್ಲದೆ, ಪ್ರಾಧಿಕಾರದ ಅಧಿಕೃತ ಆನ್ಲೈನ್ ತಾಣ https://kpp.karnataka.gov.in (ಆನ್ಲೈನ್ ಪುಸ್ತಕ ಖರೀದಿ ವಿಭಾಗವನ್ನು ಇಲ್ಲಿ ವೀಕ್ಷಿಸಿ) ನಲ್ಲಿ ಕೂಡ ಈ ಶೇ.50 ರಿಯಾಯಿತಿ ದೊರೆಯಲಿದೆ.
ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ವಿವಿಧ ಪ್ರಕಾರದ ಕೃತಿಗಳನ್ನು ಪ್ರಕಟಿಸುತ್ತಾ ಬಂದಿರುವ ಕನ್ನಡ ಪುಸ್ತಕ ಪ್ರಾಧಿಕಾರವು ಈವರೆಗೆ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಮುಂತಾದ ಹಲವು ಹತ್ತು ವಿಭಾಗಗಳಲ್ಲಿ ಸುಮಾರು 700ಕ್ಕೂ ಹೆಚ್ಚು ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ ಮತ್ತು ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸುವುದೇ ಪ್ರಾಧಿಕಾರದ ಉದ್ದೇಶವಾಗಿದೆ ಎಂದು ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












