ದೇವನಹಳ್ಳಿ: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದ ಬಗ್ಗೆ ರಾಜ್ಯಾದ್ಯಂತ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. “ಕುಮಾರಣ್ಣ ಆರೋಗ್ಯವಾಗಿದ್ದಾರೆ, ಯಾವುದೇ ಆತಂಕದ ಅಗತ್ಯವಿಲ್ಲ” ಎಂದು ಅವರು ರಾಜ್ಯದ ಜನತೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ.
ದೇವನಹಳ್ಳಿಯಲ್ಲಿ ಜನತಾ ದಳ (ಜೆಡಿಎಸ್) ಆಯೋಜಿಸಿದ್ದ ಜನರೊಂದಿಗೆ ಸಮಾವೇಶದಲ್ಲಿ ಮಾತನಾಡಿದ ನಿಖಿಲ್, “ಕುಮಾರಣ್ಣನ ಆರೋಗ್ಯದ ಬಗ್ಗೆ ಕೆಲವರು ಊಹಾಪೋಹಗಳನ್ನು ಹಬ್ಬಿಸುತ್ತಿದ್ದಾರೆ. ಆದರೆ, ತಂದೆ-ತಾಯಿಯ ಆಶೀರ್ವಾದ, ಭಗವಂತನ ಕೃಪೆ ಮತ್ತು ಜನರ ಪ್ರೀತಿಯಿಂದ ಅವರು ಆರೋಗ್ಯವಾಗಿದ್ದಾರೆ. ಯಾವುದೇ ಗಂಭೀರ ಸಮಸ್ಯೆ ಇಲ್ಲ” ಎಂದು ತಿಳಿಸಿದರು.
“ಇತ್ತೀಚೆಗೆ ಮಾಧ್ಯಮಗಳು ಮತ್ತು ಕಾರ್ಯಕರ್ತರಿಂದ ಕುಮಾರಣ್ಣನ ಆರೋಗ್ಯದ ಬಗ್ಗೆ ಕೇಳುತ್ತಿದ್ದಾರೆ. ಅವರ ಆರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರು ಇದೆ, ಆದರೆ ಚಿಂತೆಗೆ ಕಾರಣವಿಲ್ಲ. ಅವರು ಶೀಘ್ರದಲ್ಲೇ ಸಂಪೂರ್ಣ ಗುಣಮುಖರಾಗಲಿದ್ದಾರೆ. ನಾನು ಪ್ರತಿನಿತ್ಯ ದೇವರಲ್ಲಿ ನನ್ನ ಆಯಸ್ಸನ್ನು ನನ್ನ ತಂದೆಗೆ ಕೊಡಬೇಕೆಂದು ಪ್ರಾರ್ಥಿಸುತ್ತೇನೆ” ಎಂದು ಭಾವುಕವಾಗಿ ಹೇಳಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಕುಮಾರಸ್ವಾಮಿ ಇಬ್ಬರೂ ಶತಾಯುಷಿಗಳಾಗುವ ವಿಶ್ವಾಸವಿದೆ ಎಂದು ನಿಖಿಲ್ ಹೇಳಿದರು. “ನಾನು 80 ಕ್ಷೇತ್ರಗಳಲ್ಲಿ ಸಂಚರಿಸಿ, ತಂದೆಯ ಜವಾಬ್ದಾರಿಯನ್ನು ಹೊತ್ತಿದ್ದೇನೆ. ಪಕ್ಷದ ಕಾರ್ಯಕರ್ತರು ಮತ್ತು ಜನರು ಯಾವುದೇ ಗೊಂದಲಕ್ಕೆ ಒಳಗಾಗದೇ, ಕುಮಾರಣ್ಣನ ಆರೋಗ್ಯಕ್ಕಾಗಿ ಪ್ರಾರ್ಥಿಸಿ” ಎಂದು ಕೋರಿದರು.