ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಿ ಎಫ್.ಐ.ಆರ್ ದಾಖಲಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳ ಕುರಿತು ಪಾಲಿಕೆಯ ಕೇಂದ್ರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಅನಧಿಕೃತವಾಗಿ ಅಳವಡಿಸುವ ಫ್ಲೆಕ್ಸ್, ಬ್ಯಾನರ್ ಗಳ ಸಂಖ್ಯೆ ಹೆಚ್ಚಾಗಿದ್ದು, ಎಲ್ಲಾ ಕಡೆ ತೆರವುಗೊಳಿಸಬೇಕು. ಅಲ್ಲದೆ ಫ್ಲೆಕ್ಸ್, ಬ್ಯಾನರ್ ಅಳವಡಿಸಿರುವವರಿಗೆ ದುಪ್ಪಟ್ಟು ದಂಡ ವಿಧಿಸುವ ಜೊತೆಗೆ ಎಫ್.ಐ.ಆರ್ ದಾಖಲಿಸಲು ಸೂಚನೆ ನೀಡಿದರು.
ನಗರದಲ್ಲಿ ಯಾವುದೇ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ಈ ಸಂಬಂಧ ಎಲ್ಲಾ ಅಧಿಕಾರಿಗಳು ತಮ್ಮ ವಲಯಗಳಲ್ಲಿ ಪರಿಶೀಲನೆ ನಡೆಸಿ ಅನಧಿಕೃತ ಫ್ಲೆಕ್ಸ್ ಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಲು ಸೂಚಿಸಿದರು.
ಬಳ್ಳಾರಿ ರಸ್ತೆಯುದ್ದಕ್ಕೂ ಫ್ಲೆಕ್ಸ್, ಬ್ಯಾನರ್ ಗಳನ್ನು ಅಳವಡಿಸಲಾಗಿದ್ದು, ಪಶ್ಚಿಮ, ಪೂರ್ವ ಹಾಗೂ ಯಲಹಂಕ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಪರಿಶೀಲಿಸಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕು. ಫ್ಲೆಕ್ಸ್ ತೆರವುಗೊಳಿಸಲು ಖರ್ಚಾಗುವ ಹಣವನ್ನು ಫ್ಲೆಕ್ಸ್ ಗಳನ್ನು ಅಳವಡಿಸಿರುವವರಿಂದಲೇ ವಸೂಲಿ ಮಾಡಲು ಸೂಚಿಸಿದರು.
12 ಎಫ್.ಐ.ಆರ್ ದಾಖಲು ಹಾಗೂ 12 ಲಕ್ಷ ರೂ. ದಂಡ:
ನಗರದ ಪೂರ್ವ, ಪಶ್ಚಿಮ ಹಾಗೂ ಯಲಹಂಕ ಸೇರಿದಂತೆ ಮೂರೂ ವಲಯಗಳು ಸೇರಿದಂತೆ ನಿನ್ನೆಯಿಂದ 1,350 ಕ್ಕೂ ಹೆಚ್ಚು ಫ್ಲೆಕ್ಸ್, ಬ್ಯಾನರ್ ಗಳನ್ನು ತೆರವುಗೊಳಿಸಲಾಗಿದೆ. 600 ಕ್ಕೂ ಹೆಚ್ಚು ಪಕ್ಷದ ಧ್ವಜಗಳನ್ನು ತೆರವುಗೊಳಿಸಲಾಗಿದೆ. ಇದುವೆರೆಗ 12 ಎಫ್.ಐ.ಆರ್ ಗಳನ್ನು ದಾಖಲಿಸಲಾಗಿದ್ದು, 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಮಸ್ಯೆ ಬಗೆಹರಿಸಿ:
ನಗರದಲ್ಲಿ ಪ್ರಸ್ತುತ ಗುರುತಿಸಿರುವಂತಹ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಕಾಮಗಾರಿ ನಡೆಯುತ್ತಿದ್ದರೆ ಮಳೆಗಾಲ ಪ್ರಾರಂಭವಾಗುವ ವೇಳೆಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಜಕಾಲುವೆಗಳಲ್ಲಿ ಕಸ ಬಿಸಾಡದಂತೆ ಕ್ರಮ ಕೈಗೊಳ್ಳಿ:
ರಾಜಕಾಲುವೆ ಪಕ್ಕದಲ್ಲಿ ಬರುವ ಮನೆಗಳು ಹಾಗೂ ಕೊಳಗೇರಿ ಪ್ರದೇಶಗಳಲ್ಲಿ ತ್ಯಾಜ್ಯ ಸಂಗ್ರಹಣಾ ಕಾರ್ಯ ಸರಿಯಾಗಿ ಮಾಡಬೇಕು. ರಾಜಕಾಲುವೆಗಳಲ್ಲಿ ತ್ಯಾಜ್ಯ ಬಿಸಾಡದಂತೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಅಲ್ಲದೆ ರಾಜಕಾಲುವೆಗಳಲ್ಲಿ ಕಸ ಬಿಸಾಡದಂತೆ ಕ್ರಮ ಕೈಗೊಳ್ಳಬೇಕು. ರಾಜಕಾಲುವೆಗಳಲ್ಲಿ ಕಸ ಬಿಸಾಡುವ ಸ್ಥಳಗಳನ್ನು ಗುರುತಿಸಿ ಮಾರ್ಷಲ್ಗಳನ್ನು ನಿಯೋಜನೆ ಮಾಡಲು ಸೂಚಿಸಿದರು.
ಟ್ರ್ಯಾಶ್ ಬ್ಯಾರಿಯರ್ಸ್ ಅಳವಡಿಸಿ:
ರಾಜಕಾಲವೆಗಳಲ್ಲಿ ಹೆಚ್ಚು ತ್ಯಾಜ್ಯ ಬರುವ ಸ್ಥಳಗಳನ್ನು ಗುರುತಿಸಿ, ಅಲ್ಲಿ ಟ್ರ್ಯಾಶ್ ಬ್ಯಾರಿಯರ್ಸ್ ಗಳನ್ನು ಅಳವಡಿಸಬೇಕು. ಆ ಬಳಿಕ ಕಾಲಕಾಲಕ್ಕೆ ತ್ಯಾಜ್ಯವನ್ನು ತೆರವುಗೊಳಿಸುತ್ತಿರಲು ಸೂಚನೆ ನೀಡಿದರು. ಇನ್ನು ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ನಿರಂತರವಾಗಿ ಮಾಡಲು ಸೂಚಿಸಿದರು.
ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ಸತೀಶ್, ಅರ್ಚನಾ, ರಮ್ಯಾ, ಕರೀಗೌಡ, ದಿಗ್ವಿಜಯ್ ಬೋಡ್ಕೆ, ರಮೇಶ್, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.