ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇದೇ 21ನೇ ಏಪ್ರಿಲ್ 2025 ರಿಂದ 30ನೇ ಏಪ್ರಿಲ್ 2025 ರವರೆಗೆ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಕಾರ್ಯಾಚರಣಾಧಿಕಾರಿಯಾದ ರಮಾಮಣಿ ರವರು ತಿಳಿಸಿದ್ದಾರೆ
ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್ ರವರು ಮಳೆಗಾಲದ ಮುಂಚಿತವಾಗಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ(ಬಿಎಸ್ಡಬ್ಲ್ಯೂಎಂಎಲ್) ವತಿಯಿಂದ ನಗರದಾದ್ಯಂತ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಳ್ಳಲು ನಿರ್ದೇಶನ ನೀಡಿರುತ್ತಾರೆ.
ಅದರಂತೆ, ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಬರುವ ಎಲ್ಲಾ ವಾರ್ಡ್ ಗಳಲ್ಲಿಯೂ 21ನೇ ಏಪ್ರಿಲ್ 2025 ರಿಂದ 30ನೇ ಏಪ್ರಿಲ್ 2025 ರವರೆಗೆ 10 ದಿನಗಳ ಕಾಲ “ಸ್ವಚ್ಛತಾ ಅಭಿಯಾನವನ್ನು” ಹಮ್ಮಿಕೊಳ್ಳಲಾಗಿರುತ್ತದೆ.
ನಾಗರಿಕರು ಸಾರ್ವಜನಿಕ ಸ್ಥಳಗಳಾದ ರಸ್ತೆ ಬದಿ, ಪಾದಚಾರಿ ಮಾರ್ಗಗಳು, ಖಾಲಿ ಸ್ಥಳಗಳಲ್ಲಿ ತ್ಯಾಜ್ಯವನ್ನು ಎಸೆಯುತ್ತಿರುವುದರಿಂದ ನಗರದ ಸೌಂದರ್ಯಕ್ಕೆ ತೊಂದರೆಯಾಗುವುದರ ಜೊತೆಗೆ ಪರಿಸರ ಕೂಡಾ ಹಾಳಾಗಲಿದೆ. ಈ ಸಂಬಂಧ ನಗರದಾದ್ಯಂತ ತ್ಯಾಜ್ಯ ಬಿಸಾಡುವ ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಎಲ್ಲಾ ಸ್ಥಳಗಳನ್ನು ಒಂದು ಬಾರಿಗೆ ಸ್ವಚ್ಛತೆಗೊಳಿಸಲು ಕಾರ್ಯಕ್ರಮವನ್ನು ರೂಪಿಸಲಾಗಿದೆ.
ಸಾರ್ವಜನಿಕರು, ಸರ್ಕಾರೇತರ ಸಂಘ ಸಂಸ್ಥೆಗಳು, ನಿವಾಸಿ ಕಲ್ಯಾಣ ಸಂಘಗಳು, ಅಪಾರ್ಟಮೆಂಟ್ ಮಾಲಿಕರ ಸಂಘಗಳು, ಸ್ವಯಂ ಸೇವಕ ಗುಂಪುಗಳ ಸಹಭಾಗಿತ್ವದೊಂದಿಗೆ ನಗರದಾದ್ಯಂತ ರಸ್ತೆ, ಪಾದಾಚಾರಿ ಮಾರ್ಗ, ರಸ್ತೆಗಳ ಮೀಡಿಯನ್ಸ್ ಮತ್ತು ಸಾರ್ವಜನಿಕ ಸ್ಥಳಗಳನ್ನು 10 ದಿನಗಳಲ್ಲಿ ಸ್ವಚ್ಛಗೊಳಿಸುವ ಗುರಿಯನ್ನು ಹೊಂದಲಾಗಿದೆ. ಇದರ ಜೊತೆಗೆ ಏಕ ಬಳಕೆ ಪ್ಲಾಸ್ಟಿಕ್ ಉತ್ಪನ್ನಗಳನ್ನು ಬಳಸುವ ಉದ್ದಿಮೆ/ಮಳಿಗೆಗಳ ಮೇಲೆ ದಾಳಿ ನಡೆಸಿ, ಏಕ ಬಳಕೆ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕ್ರಮವಹಿಸಲಾಗುವುದು.
ಕಟ್ಟಡ ಭಗ್ನಾವಶೇಷಗಳ ತೆರವು:
ನಗರದಲ್ಲಿ ಕಟ್ಟಡ ಭಗ್ನಾವಶೇಷಗಳ ನಿಯಂತ್ರಣಕ್ಕೂ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು. ಖಾಲಿ ಜಾಗದಲ್ಲಿ ಸುರಿದಿರುವ ಕಟ್ಟಡ ಭಗ್ನಾವಶೇಷಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲು ಕ್ರಮವಹಿಸಲಾಗುವುದು.
ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ:
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಬಿಸಾಡದಂತೆ ನಾಗರಿಕರಲ್ಲಿ ಅರಿವು ಮೂಡಿಸುವ ಕುರಿತು ಎಲ್ಲಾ 8 ವಲಯಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ತ್ಯಾಜ್ಯ ಸಂಗ್ರಹಿಸುವ ಆಟೋ ಟಿಪ್ಪರ್ಗಳಲ್ಲಿ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುವುದು.
ಬಿಬಿಎಂಪಿ, ಬಿಎಸ್ಡಬ್ಲ್ಯೂಎಂಎಲ್, ಸರ್ಕಾರೇತರ ಸಂಘ ಸಂಸ್ಥೆಗಳು, ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು, ಸ್ವಚ್ಛತಾ ಅಭಿಯಾನವನ್ನು ನಡೆಸಲಾಗುವುದು.