ಮೈಸೂರು : ಕಾಂಗ್ರೆಸ್ ಸರ್ಕಾರದ ಜನಪರ ಕಾರ್ಯಗಳನ್ನು ಜನರ ಮುಂದಿಡುವ ಉದ್ದೇಶದಿಂದ ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಅವರು, ಈ ಸಮಾವೇಶದಲ್ಲಿ 2,600 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದರು.
ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಬಿಜೆಪಿಯವರು ಮಾಡಿದ ಅಭಿವೃದ್ಧಿ ಕಾರ್ಯಗಳೇನು ಎಂದು ಪ್ರಶ್ನಿಸಿದರು. ನಗರ ಪ್ರದೇಶಗಳಲ್ಲಿ ಕಾಂಗ್ರೆಸ್ನ ಒಲವು ಕಡಿಮೆಯಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ, ಮೈಸೂರು ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳನ್ನು ಮತ್ತು ಬೆಂಗಳೂರು ನಗರದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದಿದೆ ಎಂದು ಸ್ಪಷ್ಟಪಡಿಸಿದರು. “ನಾಳಿನ ಕಾರ್ಯಕ್ರಮ ಶಕ್ತಿ ಪ್ರದರ್ಶನವಲ್ಲ, ಅಭಿವೃದ್ಧಿಯ ಕಾರ್ಯಕ್ರಮವಾಗಿದೆ,” ಎಂದು ಒತ್ತಿ ಹೇಳಿದರು.
ಕೃಷ್ಣಾ ನದಿ ನೀರು ಹಂಚಿಕೆ: ಕೇಂದ್ರದಿಂದ ಇನ್ನೂ ಅಧಿಸೂಚನೆ ಇಲ್ಲ
ಕೃಷ್ಣಾ ಜಲವಿವಾದ ನ್ಯಾಯಾಧೀಕರಣದ ಅವಧಿ ವಿಸ್ತರಣೆಗೆ ಯಾವುದೇ ವಿರೋಧವಿಲ್ಲ ಎಂದ ಸಿಎಂ, ಕೇಂದ್ರ ಸರ್ಕಾರ ಇದುವರೆಗೆ ನೀರು ಹಂಚಿಕೆಗೆ ಸಂಬಂಧಿಸಿದ ಅಧಿಸೂಚನೆ ಹೊರಡಿಸದಿರುವುದು ರಾಜ್ಯದ ಮೇಲೆ ಒತ್ತಡ ಹೇರಿದಂತಾಗಿದೆ ಎಂದರು. ಆಂಧ್ರಪ್ರದೇಶ ಮತ್ತು ತೆಲಂಗಾಣದ ನಡುವಿನ ಜಲವಿವಾದದಿಂದ ಕರ್ನಾಟಕಕ್ಕೆ ಯಾವುದೇ ನಷ್ಟವಾಗದು ಎಂದು ಸ್ಪಷ್ಟಪಡಿಸಿದ ಅವರು, ಆಲಮಟ್ಟಿ ಜಲಾಶಯದ ಎತ್ತರವನ್ನು 524.26 ಮೀಟರ್ಗೆ ಹೆಚ್ಚಿಸಲು ಕೇಂದ್ರ ಅನುಮತಿ ನೀಡಿದೆ ಎಂದರು.
ಕಾಲ್ತುಳಿತ ಪ್ರಕರಣ: ಸಚಿವ ಸಂಪುಟದಲ್ಲಿ ತೀರ್ಮಾನ
ಬೆಂಗಳೂರಿನ ಆರ್ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ತನಿಖಾ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.
ಧರ್ಮಸ್ಥಳ ಸೌಜನ್ಯ ಪ್ರಕರಣ: ಕಾನೂನು ರೀತಿಯ ಕ್ರಮ
ಧರ್ಮಸ್ಥಳದ ಸೌಜನ್ಯ ಪ್ರಕರಣದಲ್ಲಿ ಎಸ್ಐಟಿ ತನಿಖೆಗೆ ಒತ್ತಾಯಿಸಲಾಗಿದೆ ಎಂಬ ಪ್ರಶ್ನೆಗೆ, ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಕಾನೂನು ರೀತಿಯ ಕ್ರಮ ಕೈಗೊಳ್ಳಲಿದೆ ಎಂದರು. ಪ್ರಕರಣಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬ ಹತ್ತು ವರ್ಷಗಳ ನಂತರ ಹೇಳಿಕೆ ನೀಡಿದ್ದು, ಪೊಲೀಸ್ ಇಲಾಖೆಯೊಂದಿಗೆ ಚರ್ಚಿಸಿ ಎಸ್ಐಟಿ ತನಿಖೆಯ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಶಾಲೆಗಳಿಗೆ ಬಾಂಬ್ ಬೆದರಿಕೆ: ಪೊಲೀಸರಿಗೆ ತನಿಖೆ ಸೂಚನೆ
ಬೆಂಗಳೂರಿನ 40 ಶಾಲೆಗಳಿಗೆ ಬಂದ ಬಾಂಬ್ ಬೆದರಿಕೆ ಕರೆಗಳ ಬಗ್ಗೆ, ಇದು ಸುಳ್ಳು ಕರೆ ಆಗಿರಬಹುದು ಎಂದು ತನಿಖೆಗೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ತಿಳಿಸಿದರು. ಅಪಪ್ರಚಾರ ಮತ್ತು ಪ್ರಚೋದನಕಾರಿ ಕೃತ್ಯಗಳ ವಿರುದ್ಧ ಕಠಿಣ ಕಾನೂನು ರೂಪಿಸಲಾಗುತ್ತಿದೆ ಎಂದರು.
ಬಿಜೆಪಿಗೆ ಸವಾಲು: ಪ್ರಧಾನಿ ಹುದ್ದೆಯನ್ನು ಎಸ್ಸಿಗೆ ಬಿಟ್ಟುಕೊಡಿ
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿಯಾಗಿ ಸೂಚಿಸುವಂತೆ ಬಿಜೆಪಿಯವರು ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮೊದಲು ತಮ್ಮ ಪಕ್ಷದ ಅಧ್ಯಕ್ಷ ಸ್ಥಾನವನ್ನು ಎಸ್ಸಿ ವರ್ಗಕ್ಕೆ ಬಿಟ್ಟುಕೊಡಲಿ ಎಂದು ತಿರುಗೇಟು ನೀಡಿದರು. ದೇಶದ ಪ್ರಧಾನಿ ಸ್ಥಾನವನ್ನು ಪರಿಶಿಷ್ಟ ಜಾತಿಯವರಿಗೆ ನೀಡಲಿ ಎಂದು ಸವಾಲು ಹಾಕಿದ ಅವರು, ಸಂವಿಧಾನಬದ್ಧವಾಗಿ ಸಾಮಾಜಿಕ ನ್ಯಾಯದ ಪರವಾಗಿರುವುದು ಕಾಂಗ್ರೆಸ್ ಮಾತ್ರ ಎಂದು ಒತ್ತಿ ಹೇಳಿದರು.