ಬೆಳಗಾವಿ: ರಬ್ಬರ್ ಬೆಳೆಯನ್ನು ತೋಟಗಾರಿಕೆ ಇಲಾಖೆಯ ವ್ಯಾಪ್ತಿಗೆ ಒಳಪಡಿಸುವ ಯಾವುದೇ ಪ್ರಸ್ತಾಪನೆ ಇಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಹಾಗೂ ತೋಟಗಾರಿಕಾ ಸಚಿವರ ಪರವಾಗಿ ವಿಧಾನ ಪರಿಷತ್ನಲ್ಲಿ ಲಿಖಿತ ಉತ್ತರ ನೀಡಿದ ಅವರು, ರಬ್ಬರ್ ಬೆಳೆಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ರಬ್ಬರ್ ಮಂಡಳಿಯ ಮೂಲಕವೇ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ರಬ್ಬರ್ ಮಂಡಳಿಯು ಕೇಂದ್ರ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಅಧೀನದಲ್ಲಿದ್ದು, ರಾಜ್ಯದ ತೋಟಗಾರಿಕಾ ಇಲಾಖೆಯಿಂದ ರಬ್ಬರ್ಗೆ ಪ್ರತ್ಯೇಕ ಕಾರ್ಯಕ್ರಮಗಳಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
ವಿಧಾನ ಪರಿಷತ್ ಸದಸ್ಯರುಗಳಾದ ಪ್ರತಾಪ್ ಸಿಂಹ ನಾಯಕ್ ಕೆ, ಡಾ. ತಳವಾರ್ ಸಾಬಣ್ಣ, ಶಾಂತರಾಮ್ ಬುಡ್ನ ಸಿದ್ದಿ ಮತ್ತು ಡಾ. ಧನಂಜಯ ಸರ್ಜಿ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸುಮಾರು 50,800 ಹೆಕ್ಟೇರ್ ಪ್ರದೇಶದಲ್ಲಿ ರಬ್ಬರ್ ಬೆಳೆಯಲಾಗುತ್ತಿದ್ದು, ವಾರ್ಷಿಕ ಉತ್ಪಾದನೆ 5.27 ಲಕ್ಷ ಮೆಟ್ರಿಕ್ ಟನ್ಗಳಷ್ಟಿದೆ ಎಂದು ಮಾಹಿತಿ ನೀಡಿದರು.
ಪ್ರಮುಖವಾಗಿ ದಕ್ಷಿಣ ಕನ್ನಡ, ಕೊಡಗು, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಈ ಬೆಳೆಯನ್ನು ಬೆಳೆಯಲಾಗುತ್ತಿದೆ. ರಬ್ಬರ್ ಬೆಳೆಯ ಸಮಗ್ರ ಅಭಿವೃದ್ಧಿ ಕಾರ್ಯಕ್ರಮಗಳನ್ನು 1947ರಲ್ಲಿ ಸ್ಥಾಪಿತವಾದ ರಬ್ಬರ್ ಮಂಡಳಿ (ಪ್ರಧಾನ ಕಛೇರಿ ಕೇರಳದ ಕೊಟ್ಟಾಯಂ) ನಡೆಸುತ್ತಿದೆ. ರಾಜ್ಯದಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಮಂಡಳಿಯ ಪ್ರಾದೇಶಿಕ ಕಛೇರಿಗಳು ಕಾರ್ಯನಿರ್ವಹಿಸುತ್ತಿವೆ.
ಕೇಂದ್ರ ಕೃಷಿ ಸಚಿವಾಲಯದ ಕೃಷಿ ವೆಚ್ಚ ಮತ್ತು ಬೆಲೆಗಳ ಆಯೋಗವು ಪ್ರತಿ ವರ್ಷ 22 ಪ್ರಮುಖ ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ನಿಗದಿಪಡಿಸುತ್ತದೆಯಾದರೂ, ರಬ್ಬರ್ ಅದರಲ್ಲಿ ಸೇರಿಲ್ಲ. ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿಯೂ ರಬ್ಬರ್ ಬೆಳೆಯನ್ನು ಸೇರಿಸಲಾಗಿಲ್ಲ.
ರಬ್ಬರ್ ಆಮದು ಸುಂಕ ಹೆಚ್ಚಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸುವ ವಿಚಾರವಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಮೂಲಕ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಂತೋಷ್ ಲಾಡ್ ಭರವಸೆ ನೀಡಿದ್ದಾರೆ.











