ಜಿಲ್ಲಾಧಿಕಾರಿಗಳೇ ಹೊಣೆ; ಕುಡಿಯುವ ನೀರಿನ ಪೂರೈಕೆಗೆ ಮುಂಜಾಗರೂಕತಾ ಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕುಡಿಯುವ ನೀರಿನ ಪೂರೈಕೆಗೆ ತೊಂದರೆಯಾಗದಂತೆ ಜಿಲ್ಲಾಧಿಕಾರಿಗಳು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.
ವಿಧಾನಸೌಧ ಸಭಾಂಗಣದಲ್ಲಿ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳ ಕುಡಿಯುವ ನೀರು ಪೂರೈಕೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮುಖ್ಯಮಂತ್ರಿ ಈ ಸೂಚನೆ ನೀಡಿದರು.
“ಕುಡಿಯುವ ನೀರಿಗೆ ಯಾವುದೇ ತೊಂದರೆಯಾದರೆ ಆಯಾ ಜಿಲ್ಲಾಧಿಕಾರಿಗಳೇ ವೈಯಕ್ತಿಕವಾಗಿ ಹೊಣೆಯಾಗುತ್ತಾರೆ. ಕಂದಾಯ, ಪಂಚಾಯತ್ ರಾಜ್ ಮತ್ತು ನಗರಾಭಿವೃದ್ಧಿ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು” ಎಂದು ಸಿದ್ದರಾಮಯ್ಯ ಎಚ್ಚರಿಸಿದರು.
ಎಪ್ರಿಲ್-ಜೂನ್ನಲ್ಲಿ ಬಿಸಿಗಾಳಿ ಹೆಚ್ಚು; ಹವಾಮಾನ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ
ಈ ಬಾರಿ ಎಪ್ರಿಲ್ನಿಂದ ಜೂನ್ವರೆಗೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಗಾಳಿ ದಿನಗಳು ಕಂಡುಬರುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಮುಂಜಾಗರೂಕತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಕುಡಿಯುವ ನೀರಿಗೆ ಅನುದಾನದ ಕೊರತೆಯಿಲ್ಲ; 419.50 ಕೋಟಿ ರೂ. ಲಭ್ಯ
ಕುಡಿಯುವ ನೀರು ಪೂರೈಕೆಗೆ ಯಾವುದೇ ಅನುದಾನದ ಕೊರತೆ ಇಲ್ಲ ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದರು. ಜಿಲ್ಲಾಧಿಕಾರಿಗಳ ವರದಿ ಆಧಾರದಲ್ಲಿ ಅಗತ್ಯ ಹಣವನ್ನು ತಕ್ಷಣ ಒದಗಿಸಲು ಹಣಕಾಸು ಇಲಾಖೆಗೆ ಈಗಾಗಲೇ ಸೂಚಿಸಲಾಗಿದೆ. ಈಗಾಗಲೇ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ ಕುಡಿಯುವ ನೀರಿನ ವ್ಯವಸ್ಥೆಗಾಗಿ 419.50 ಕೋಟಿ ರೂಪಾಯಿ ಲಭ್ಯವಿದೆ.
ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತ್ಗಳಲ್ಲಿ ನೀರಿನ ಸಮಸ್ಯೆ
ರಾಜ್ಯದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾದ 213 ತಾಲೂಕುಗಳು ಮತ್ತು 2410 ಗ್ರಾಮ ಪಂಚಾಯತ್ಗಳನ್ನು ಗುರುತಿಸಲಾಗಿದೆ. ಪ್ರಸ್ತುತ 114 ತಾಲೂಕುಗಳ 598 ಗ್ರಾಮ ಪಂಚಾಯತ್ಗಳಲ್ಲಿ ನೀರಿನ ಸಮಸ್ಯೆ ಇದೆ. 137 ಗ್ರಾಮಗಳಿಗೆ 129 ಟ್ಯಾಂಕರ್ಗಳ ಮೂಲಕ ಮತ್ತು 515 ಗ್ರಾಮಗಳಿಗೆ 585 ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ.
ಕಲಬುರಗಿ (147), ಬಾಗಲಕೋಟೆ (114), ಬೆಳಗಾವಿ (127), ಚಿಕ್ಕಮಗಳೂರು (115), ಹಾವೇರಿ (138), ಮಂಡ್ಯ (130), ತುಮಕೂರು (141) ಮತ್ತು ಉತ್ತರ ಕನ್ನಡ (125) ಜಿಲ್ಲೆಗಳಲ್ಲಿ ಹೆಚ್ಚು ಗ್ರಾಮ ಪಂಚಾಯತ್ಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ.
ನಗರ ಪ್ರದೇಶಗಳಲ್ಲಿ 27 ಸ್ಥಳೀಯ ಸಂಸ್ಥೆಗಳಲ್ಲಿ ಪ್ರಸ್ತುತ ಸಮಸ್ಯೆ
27 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆ ಇದ್ದು, 95 ಸಂಸ್ಥೆಗಳಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ. 145 ವಾರ್ಡ್ಗಳಿಗೆ 57 ಟ್ಯಾಂಕರ್ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, 22 ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ.
ಟ್ಯಾಂಕರ್ಗೆ ಬದಲು ಖಾಸಗಿ ಬೋರ್ವೆಲ್ಗಳಿಗೆ ಆದ್ಯತೆ; ಅಗತ್ಯಕ್ಕೆ ಕೊಳವೆ ಬಾವಿ ಕೊರೆಯಬಹುದು
ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಟ್ಯಾಂಕರ್ ನೀರು ಪೂರೈಕೆ ಮಾಡಬೇಕು. ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆಯುವುದಕ್ಕೆ ಆದ್ಯತೆ ನೀಡಬೇಕು. ಅಗತ್ಯವಿದ್ದಲ್ಲಿ ಹೊಸ ಕೊಳವೆ ಬಾವಿಗಳನ್ನು ಕೊರೆಯಬಹುದು ಎಂದು ಮುಖ್ಯಮಂತ್ರಿ ಸೂಚಿಸಿದರು.
ಜಲಾಶಯಗಳಲ್ಲಿ 321.93 ಟಿ.ಎಂ.ಸಿ ನೀರು ಲಭ್ಯ; ಕುಡಿಯುವ ನೀರಿಗೆ ಆದ್ಯತೆ
ರಾಜ್ಯದ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ 321.93 ಟಿ.ಎಂ.ಸಿ ನೀರು ಲಭ್ಯವಿದ್ದು, ಇದು ಒಟ್ಟು ಸಾಮರ್ಥ್ಯದ 36% ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 330.35 ಟಿ.ಎಂ.ಸಿ ನೀರು ಇತ್ತು. ಮಳೆಗಾಲ ವಿಳಂಬವಾಗಿ ಆರಂಭವಾಗುವ ಸಾಧ್ಯತೆ ಇರುವುದರಿಂದ ಜುಲೈ ಮಧ್ಯದವರೆಗೆ ಕುಡಿಯುವ ನೀರಿಗಾಗಿ ಜಲಾಶಯಗಳಲ್ಲಿ ನೀರು ಕಾಯ್ದಿರಿಸುವಂತೆ ಸೂಚಿಸಲಾಗಿದೆ. ನೀರಾವರಿಗಿಂತ ಕುಡಿಯುವ ನೀರಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ತಿಳಿಸಿದರು.
ಸಾರ್ವಜನಿಕ ಅಹವಾಲುಗಳಿಗೆ ತುರ್ತು ಸ್ಪಂದನ; ನಿಯಂತ್ರಣ ಕೊಠಡಿಗಳ ಸ್ಥಾಪನೆ
ಕುಡಿಯುವ ನೀರಿನ ಸಮಸ್ಯೆಯ ಕುರಿತು ಸಾರ್ವಜನಿಕರ ಅಹವಾಲುಗಳಿಗೆ ತುರ್ತಾಗಿ ಸ್ಪಂದಿಸಬೇಕು. ತಾಲೂಕು ಮತ್ತು ವಾರ್ಡ್ ಮಟ್ಟದಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿ, ಜಿಲ್ಲಾ ಮಟ್ಟದ ಕಾರ್ಯಪಡೆಯನ್ನು ಸಕ್ರಿಯಗೊಳಿಸುವಂತೆ ಸೂಚಿಸಲಾಗಿದೆ.
ಎಲ್ಲಾ ಆರ್ಒ ಘಟಕಗಳು 24×7 ವಿದ್ಯುತ್ ಸರಬರಾಜಿನೊಂದಿಗೆ ಕಾರ್ಯನಿರ್ವಹಿಸುವಂತೆ ಮತ್ತು ತಕ್ಷಣದ ದುರಸ್ತಿ ಕ್ರಮಗಳಿಗಾಗಿ ತಾಲೂಕು ಮಟ್ಟದ ತಂಡಗಳನ್ನು ನಿಯೋಜಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದರು.
ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆ ತಪ್ಪಿಸಿ; ಮೇವಿನ ಕೊರತೆಯಿಲ್ಲ
ಮಧ್ಯಪ್ರಾಚ್ಯದ ಯುದ್ಧದಿಂದಾಗಿ ರಸಗೊಬ್ಬರ ಪೂರೈಕೆಯಲ್ಲಿ ಅಡಚಣೆಯಾಗುವ ಸಾಧ್ಯತೆ ಇರುವುದರಿಂದ, ವ್ಯಾಪಾರಿಗಳು ಹೆಚ್ಚು ದಾಸ್ತಾನು ಮಾಡದಂತೆ ನಿಗಾ ವಹಿಸಬೇಕು. ಅರ್ಹ ರೈತರಿಗೆ ಸಕಾಲದಲ್ಲಿ ಯೂರಿಯಾ, ಡಿಎಪಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಬೇರೆ ರಾಜ್ಯಗಳಿಗೆ ರಸಗೊಬ್ಬರ ಸಾಗಾಟವನ್ನು ನಿಯಂತ್ರಿಸಲು ಚೆಕ್ಪೋಸ್ಟ್ಗಳಲ್ಲಿ ತಪಾಸಣೆ ಬಿಗಿಗೊಳಿಸುವಂತೆ ಸೂಚಿಸಲಾಗಿದೆ.
ಕಳೆದ ಎರಡು ವರ್ಷಗಳ ಉತ್ತಮ ಮಳೆಯಿಂದಾಗಿ ಮೇವಿನ ಕೊರತೆ ಸದ್ಯ ಇಲ್ಲ ಎಂದು ಹೇಳಿದ ಮುಖ್ಯಮಂತ್ರಿ, ಆದರೂ ಇದರ ಬಗ್ಗೆ ನಿರ್ಲಕ್ಷ್ಯ ವಹಿಸದೆ ಲಭ್ಯತೆ ಖಾತ್ರಿಪಡಿಸುವಂತೆ ತಿಳಿಸಿದರು.
ಕಲುಷಿತ ನೀರು ಪೂರೈಕೆ ತಡೆಯಲು ಕ್ರಮ; ವಿದ್ಯುತ್ ಸಂಪರ್ಕಕ್ಕೆ ಆದ್ಯತೆ
ಕಲುಷಿತ ನೀರು ಪೂರೈಕೆಯಾಗದಂತೆ ಎಲ್ಲಾ ಜಿಲ್ಲೆಗಳಲ್ಲಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್ಚರಿಸಿದರು. ಕುಡಿಯುವ ನೀರಿನ ಯೋಜನೆಗಳಿಗೆ ವಿದ್ಯುತ್ ಸಂಪರ್ಕ ತ್ವರಿತವಾಗಿ ಒದಗಿಸಲು ಪಂಚಾಯತ್ ರಾಜ್ ಮತ್ತು ಇಂಧನ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಎಲ್ಲಾ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ಟಾಸ್ಕ್ ಫೋರ್ಸ್ ಸಭೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.












