ವಿಜಯಪುರದಲ್ಲಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ (ಮಿನಿ ಪ್ಲಾನೆಟೇರಿಯಂ) ನಿರ್ಮಾಣ ಹಾಗೂ ಬಬಲೇಶ್ವರ ಮತ್ತು ವಿಜಯಪುರದಲ್ಲಿ ಎರಡು ಹಾಸ್ಟೆಲ್ಗಳ ನಿರ್ಮಾಣಕ್ಕೆ ಒಟ್ಟು ₹56.88 ಕೋಟಿ ವೆಚ್ಚ ಮಾಡಲು ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, “2015-16ನೇ ಸಾಲಿನ ಬಜೆಟ್ಟಿನಲ್ಲಿ ವಿಜಯಪುರವೂ ಸೇರಿದಂತೆ ರಾಜ್ಯದ ಹಲವೆಡೆ ಉಪಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ಕಿರು ತಾರಾಲಯ ಸ್ಥಾಪಿಸಲು ಘೋಷಣೆ ಮಾಡಲಾಗಿತ್ತು. ಆದರೆ ಅನೇಕ ಕಾರಣಗಳಿಂದಾಗಿ ಈ ಯೋಜನೆ ಅನುಷ್ಠಾನಗೊಳ್ಳಲಿಲ್ಲ. ಈಗ ₹12.88 ಕೋಟಿಗೆ ಪರಿಷ್ಕೃತ ಅಂದಾಜು ಪಟ್ಟಿ ಸಿದ್ಧಪಡಿಸಿದ್ದು, ಇದಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ. ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮೂಲಕ ಈ ಯೋಜನೆ ಕಾರ್ಯಗತಗೊಳ್ಳಲಿದೆ.” ಎಂದರು.
ವಿಜ್ಞಾನ ಕೇಂದ್ರದ ಅವಶ್ಯಕತೆ: ವಿಜಯಪುರದಲ್ಲಿ ಈ ಯೋಜನೆಯ ಕಾಮಗಾರಿಗೆ ಇದುವರೆಗೆ ₹1.44 ಕೋಟಿ ವೆಚ್ಚವಾಗಿದೆ. ತಾರಾಲಯದಲ್ಲಿ ಡೋಮ್, ಪ್ರೊಜಕ್ಷನ್ ಸಿಸ್ಟಂ, ಒಳಾಂಗಣ ಮತ್ತು ಹೊರಾಂಗಣ ವಿಜ್ಞಾನ ಪ್ರದರ್ಶನೆಗಳು, ಆಡಿಯೋ ವ್ಯವಸ್ಥೆ, ಹವಾ ನಿಯಂತ್ರಣ ವ್ಯವಸ್ಥೆ ಎಲ್ಲವೂ ಇರಲಿವೆ. ಇದರ ಮೂಲಕ ಜಿಲ್ಲೆಯ ವಿದ್ಯಾರ್ಥಿಗಳಲ್ಲಿ ವಿಜ್ಞಾನದ ತಿಳಿವಳಿಕೆಯನ್ನು ಹೆಚ್ಚಿಸಲಾಗುವುದು. ನನೆಗುದಿಗೆ ಬಿದ್ದಿದ್ದ ಈ ಯೋಜನೆಯನ್ನು ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದಾಗಿ ಸಚಿವರು ತಿಳಿಸಿದ್ದಾರೆ.
ವಸತಿ ಶಾಲೆಗಳಿಗೆ ₹44 ಕೋಟಿ ಅನುದಾನ: ಬಬಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಮದಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಡಾ. ಬಿ. ಆರ್. ಅಂಬೇಡ್ಕರ್ ವಸತಿ ಶಾಲೆ ಮತ್ತು ವಿಜಯಪುರದಲ್ಲಿರುವ ವಸತಿಸಹಿತ ಪದವಿಪೂರ್ವ ಕಾಲೇಜಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ತಲಾ ₹22 ಕೋಟಿ ರೂ.ಗಳಂತೆ ಒಟ್ಟು ₹44 ಕೋಟಿ ರೂ. ಅನುದಾನ ನೀಡಲು ಸಂಪುಟ ಸಭೆಯಲ್ಲಿ ಅನುಮೋದನೆ ದೊರಕಿದೆ.
ವಿದ್ಯಾರ್ಥಿಗಳಿಗೆ ಹೊಸ ಸೌಲಭ್ಯಗಳು: ಈ ಎರಡೂ ವಸತಿ ಶಾಲೆಗಳು ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಮೀಸಲಾಗಿದ್ದು, ತಲಾ 250 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪ್ರಸ್ತುತ, ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಶಾಲೆಗಳಿಗೆ ಸೂಕ್ತ ಮೂಲಸೌಕರ್ಯ ಒದಗಿಸಲು ಸಾಧ್ಯವಾಗುತ್ತಿಲ್ಲ. ಹೊಸ ಕಟ್ಟಡಗಳಲ್ಲಿ ಶಾಲಾ ಕಟ್ಟಡ, ಬಾಲಕರ ಮತ್ತು ಬಾಲಕಿಯರ ಹಾಸ್ಟೆಲ್, ಭೋಜನಾಲಯ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ವಸತಿ ಗೃಹಗಳು, ರಂಗಮಂದಿರ, ಕಾಂಪೌಂಡ್, ಸೋಲಾರ್ ವಾಟರ್ ಹೀಟರ್, ಒಳಚರಂಡಿ ವ್ಯವಸ್ಥೆ ಮುಂತಾದವು ನಿರ್ಮಾಣಗೊಳ್ಳಲಿವೆ ಎಂದು ಅವರು ವಿವರಿಸಿದರು.
ರಾಜ್ಯ ಮಟ್ಟದಲ್ಲಿ ವಸತಿ ಶಾಲೆಗಳ ಅಭಿವೃದ್ಧಿ: ರಾಜ್ಯದಲ್ಲಿರುವ 61 ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಒಟ್ಟು ₹1292.50 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇದರ ಭಾಗವಾಗಿ, ವಿಜಯಪುರ ಜಿಲ್ಲೆಯ ಈ ಎರಡು ಶಾಲೆಗಳಿಗೂ ಅನುದಾನ ನೀಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.