ಬೆಂಗಳೂರು: ಅಮೇರಿಕಾದ ಬೋಸ್ಟನ್ ನಗರದಲ್ಲಿ ಆಗಸ್ಟ್ 4 ರಿಂದ 6 ರವರೆಗೆ ನಡೆಯಲಿರುವ “ಶಾಸಕಾಂಗ ಶೃಂಗಸಭೆ 2025”ರಲ್ಲಿ ಭಾಗವಹಿಸಲು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದು ಬೆಳಿಗ್ಗೆ ಬೆಂಗಳೂರಿನಿಂದ ಪ್ರಯಾಣ ಬೆಳೆಸಿದ್ದಾರೆ.
“ರಾಜ್ಯ ಶಾಸಕರ ರಾಷ್ಟ್ರೀಯ ಸಮಾವೇಶ” ಮತ್ತು “ರಾಷ್ಟ್ರೀಯ ಶಾಸಕರ ಸಮಾವೇಶ”ದ ಭಾರತ ಸಂಸ್ಥೆಗಳ ಆಶ್ರಯದಲ್ಲಿ ನಡೆಯುವ ಈ ಶೃಂಗಸಭೆಯಲ್ಲಿ ಭಾರತದ ಸಂಸದರು, ವಿವಿಧ ರಾಜ್ಯಗಳ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರು, ಸಚಿವರು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ 15,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸಲಿದ್ದಾರೆ.
ಮೂರು ದಿನಗಳ ಈ ಶೃಂಗಸಭೆಯಲ್ಲಿ ಪ್ರಜಾತಂತ್ರವನ್ನು ಗಟ್ಟಿಗೊಳಿಸುವಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಆರ್ಥಿಕ ಸ್ವಾಯತ್ತತೆ ಸೇರಿದಂತೆ ಹಲವು ವಿಷಯಗಳ ಕುರಿತು ಗೋಷ್ಠಿಗಳು, ವಿಚಾರ ಸಂಕಿರಣಗಳು ಮತ್ತು ಸಂವಾದಗಳು ಜರುಗಲಿವೆ.
ಶೃಂಗಸಭೆಯಲ್ಲಿ ಭಾಗವಹಿಸಲು ಸಭಾಪತಿ ಬಸವರಾಜ ಹೊರಟ್ಟಿ ಅವರ ನೇತೃತ್ವದ ತಂಡವು ಇಂದು ಬೆಳಿಗ್ಗೆ ಬೆಂಗಳೂರಿನಿಂದ ಪ್ರಯಾಣ ಆರಂಭಿಸಿದೆ. ಈ ತಂಡವು ನ್ಯೂಯಾರ್ಕ್, ಡಲ್ಲಾಸ್, ಬಫಲೋ ನಗರಗಳಲ್ಲಿ ಅಧ್ಯಯನ ಪ್ರವಾಸ ನಡೆಸಿ, ಆಗಸ್ಟ್ 3 ರಂದು ಬೋಸ್ಟನ್ ತಲುಪಲಿದೆ. ಆಗಸ್ಟ್ 4 ರಿಂದ 6 ರವರೆಗೆ ಶೃಂಗಸಭೆಯಲ್ಲಿ ಭಾಗವಹಿಸಿದ ಬಳಿಕ, ತಂಡವು ಆಗಸ್ಟ್ 7 ರಂದು ಬೋಸ್ಟನ್ನಲ್ಲಿ ಅಧ್ಯಯನ ಪ್ರವಾಸ ನಡೆಸಲಿದೆ. ಆಗಸ್ಟ್ 8 ರ ರಾತ್ರಿ ಬೋಸ್ಟನ್ನಿಂದ ಬೆಂಗಳೂರಿಗೆ ಮರಳಲಿದೆ.
ಶಾಸಕಾಂಗ ಶೃಂಗಸಭೆ 2025ರಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಉಪಸಭಾಪತಿ ಎಂ.ಕೆ. ಪ್ರಾಣೇಶ್, ವಿರೋಧ ಪಕ್ಷದ ನಾಯಕ ಛಲವಾದಿ ಟಿ. ನಾರಾಯಣಸ್ವಾಮಿ, ಸಭಾನಾಯಕ ಮತ್ತು ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸ್ರಾಜು, ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನ ಪರಿಷತ್ ಶಾಸಕರಾದ ಭಾರತಿ ಶೆಟ್ಟಿ, ಬಲ್ಕೀಸ್ ಬಾನು, ಹೇಮಲತಾ ನಾಯಕ್ ಮತ್ತು ಮಂಜುನಾಥ ಭಂಡಾರಿ ಭಾಗವಹಿಸಲಿದ್ದಾರೆ.