ನಂದಿಬೆಟ್ಟ: ಬೆಂಗಳೂರು ನಗರದ ಹೆಬ್ಬಾಳ ನಾಗವಾರ ಕಣಿವೆಯ ದ್ವಿತೀಯ ಹಂತದ ಸಂಸ್ಕರಿತ ನೀರನ್ನು ಶಿಡ್ಲಘಟ್ಟ ಮತ್ತು ಚಿಂತಾಮಣಿಯ 164 ಕೆರೆಗಳಿಗೆ ತುಂಬಿಸಲು ರೂ.237 ಕೋಟಿ ಮೊತ್ತದ ಯೋಜನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು.
ನಂದಿಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಶಿವಕುಮಾರ್, ಶಿಡ್ಲಘಟ್ಟದ 45 ಕೆರೆಗಳು ಮತ್ತು ಚಿಂತಾಮಣಿ ತಾಲೂಕಿನ 119 ಕೆರೆಗಳಿಗೆ ಈ ಸಂಸ್ಕರಿತ ನೀರನ್ನು ತುಂಬಿಸಲಾಗುವುದು ಎಂದರು.
ಕೆಂಪೇಗೌಡ ಕೋಟೆಗೆ ರೂ.103 ಕೋಟಿ: ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿಯ ನಾಡಪ್ರಭು ಕೆಂಪೇಗೌಡ ಕೋಟೆಯ ನವೀಕರಣ ಮತ್ತು ಸಮಗ್ರ ಅಭಿವೃದ್ಧಿಗಾಗಿ ರೂ.103 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ ನೀಡಲಾಗಿದೆ. ಇದರ ಜೊತೆಗೆ, ಚಿಂತಾಮಣಿಯ ಭಕ್ತರಹಳ್ಳಿ ಅರಸಿಕೆರೆಯ ಕೆಳಭಾಗದಲ್ಲಿ ಹೊಸ ಕೆರೆ ನಿರ್ಮಾಣಕ್ಕೆ ರೂ.36 ಕೋಟಿ ಮತ್ತು ಪಾತುಪಾಳ್ಯ ಹೋಬಳಿಯ ಮಲ್ಲಮ್ಮ ಕಣಿವೆಯಲ್ಲಿ ಜಲಾಶಯ ನಿರ್ಮಾಣಕ್ಕೆ ರೂ.189 ಕೋಟಿ ಅನುದಾನಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.

ಬಾಗೇಪಲ್ಲಿ ಭಾಗ್ಯನಗರವಾಗಿ ಮರುನಾಮಕರಣ: ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪಟ್ಟಣವನ್ನು ಭಾಗ್ಯನಗರವಾಗಿ ಮರುನಾಮಕರಣ ಮಾಡಲು ಕೇಂದ್ರ ಗೃಹ ಮಂತ್ರಾಲಯದಿಂದ ಅನುಮತಿ ಪಡೆಯಲು ತೀರ್ಮಾನಿಸಲಾಗಿದೆ.
ಗಣಿಗಾರಿಕೆ ಅಕ್ರಮ ತನಿಖೆಗೆ ಉಪಸಮಿತಿ: ಗಣಿಗಾರಿಕೆಯಲ್ಲಿ ನಡೆದ ಅಕ್ರಮಗಳ ತನಿಖೆಗಾಗಿ ಲೋಕಾಯುಕ್ತ ವಿಶೇಷ ತಂಡದ ವರದಿಯನ್ನು ಅಧ್ಯಯನ ಮಾಡಿ ಒಂದು ತಿಂಗಳಲ್ಲಿ ವರದಿ ಸಲ್ಲಿಸಲು ಕಾನೂನು ಸಚಿವರ ನೇತೃತ್ವದಲ್ಲಿ ಸಚಿವ ಸಂಪುಟ ಉಪಸಮಿತಿಯನ್ನು ರಚಿಸಲಾಗಿದೆ.
ನಂದಿ ಗಿರಿಧಾಮಕ್ಕೆ ರೂ.50 ಕೋಟಿ: ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ಹೋಟೆಲ್ ಮತ್ತು ಇತರ ಸೌಲಭ್ಯಗಳಿಗಾಗಿ ರೂ.50 ಕೋಟಿ ಅನುದಾನ ಒದಗಿಸಲಾಗಿದೆ. ಬೆಳಗಾವಿಯ ಬೈಲಹೊಂಗಲ ಮತ್ತು ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪುರಸಭೆಗಳನ್ನು ನಗರ ಸಭೆಯಾಗಿ, ಕೊಪ್ಪಳ ಜಿಲ್ಲೆಯ ಹನುಮಸಾಗರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿಸಲಾಗಿದೆ.
ಶಿಕ್ಷಣ ಮತ್ತು ಆರೋಗ್ಯಕ್ಕೆ ದೊಡ್ಡ ಮೊತ್ತದ ಅನುದಾನ: ಹಿಂದುಳಿದ ವರ್ಗದ 14 ವಸತಿ ಶಾಲೆಗಳ ನಿರ್ಮಾಣಕ್ಕೆ ರೂ.306 ಕೋಟಿ, ಚಿಂತಾಮಣಿಯಲ್ಲಿ ಮೊರಾರ್ಜಿ ವಸತಿ ಶಾಲೆ ಪ್ರಾರಂಭಕ್ಕೆ ಅನುಮೋದನೆ, ಚಿಕ್ಕಬಳ್ಳಾಪುರದಲ್ಲಿ ರೂ.141 ಕೋಟಿ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದೆ. ಚಿಂತಾಮಣಿ ಮತ್ತು ಬಾಗೇಪಲ್ಲಿಯ ಸಾರ್ವಜನಿಕ ಆಸ್ಪತ್ರೆಗಳನ್ನು 60 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲು ರೂ.36 ಕೋಟಿ, ಕೋಲಾರದ ಬಾಲಕರ ಕಾಲೇಜಿಗೆ ರೂ.40 ಕೋಟಿ, ಬಾಲಕಿಯರ ಕಾಲೇಜಿಗೆ ರೂ.20 ಕೋಟಿ, ಶಿಡ್ಲಘಟ್ಟದ ಅಮರಾವತಿಯಲ್ಲಿ ಬೆಂಗಳೂರು ಉತ್ತರ ವಿವಿಯ ಕ್ಯಾಂಪಸ್ಗೆ ರೂ.123 ಕೋಟಿ, ಮತ್ತು ನಂದಿ ವೈದ್ಯಕೀಯ ಕಾಲೇಜು ಸೇರಿದಂತೆ ಎಂಆರ್ಐ ಯಂತ್ರ ಖರೀದಿಗೆ ರೂ.21 ಕೋಟಿ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.
ಈ ಯೋಜನೆಗಳು ರಾಜ್ಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಲಿವೆ ಎಂದು ಡಿಸಿಎಂ ಶಿವಕುಮಾರ್ ತಿಳಿಸಿದರು.