ದಾವಣಗೆರೆ: ರಾಜ್ಯದಲ್ಲಿ 2028ರ ವೇಳೆಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯಲ್ಲಿ ಸೋಲಿನ ಪರಾಮರ್ಶೆ ಹಾಗೂ ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ಮನೆಗೆ ಭೇಟಿ ನೀಡಿದ ಅವರು, ಜಿಲ್ಲಾ ಬಿಜೆಪಿ ನಾಯಕರೊಂದಿಗೆ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿದರು. ಈ ವೇಳೆ 63,000 ಮತಗಳನ್ನು ನೀಡಿದ ಮತದಾರರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.
“ಸಾಮಾನ್ಯ ಕಾರ್ಯಕರ್ತ ಇಷ್ಟೊಂದು ಮತಗಳನ್ನು ಪಡೆಯುವುದು ಸುಲಭವಲ್ಲ. ಆಗುವುದೆಲ್ಲ ಒಳ್ಳೆಯದಕ್ಕೇ ಎಂಬ ವಿಶ್ವಾಸ ಇರಬೇಕು,” ಎಂದು ಹೇಳಿದ ವಿಜಯೇಂದ್ರ ಅವರು, ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ಸಮಾಧಾನಪಡಿಸಿದರು. ಈ ಸಂದರ್ಭ ದಾಸಕರಿಯಪ್ಪ ಭಾವುಕರಾದರು.
ಉಪಚುನಾವಣೆಯ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ ಅವರು, “ಉಪಚುನಾವಣೆ ಸಾಮಾನ್ಯವಾಗಿ ಆಡಳಿತ ಪಕ್ಷದ ಪರವಾಗಿಯೇ ಇರುತ್ತದೆ. ಮುಖ್ಯಮಂತ್ರಿ ಹಾಗೂ ಸಚಿವರು ದಾವಣಗೆರೆಯಲ್ಲಿ ಹಲವು ದಿನಗಳ ಕಾಲ ತಂಗಿ ಪ್ರಚಾರ ನಡೆಸಿದ್ದರು. ನಾವು ಅಧಿಕಾರದಲ್ಲಿದ್ದಾಗಲೂ ಇದೇ ಪರಿಸ್ಥಿತಿ ಇತ್ತು,” ಎಂದರು.
ಎರಡೂ ಕ್ಷೇತ್ರಗಳ ಕಾರ್ಯಕರ್ತರು ಬಿಜೆಪಿ ಗೆಲುವಿಗಾಗಿ ಶ್ರಮಪಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ವಿಜಯೇಂದ್ರ, “ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಉತ್ತಮ ಮತಗಳನ್ನು ಪಡೆದಿದ್ದಾರೆ. 70 ಸಾವಿರಕ್ಕೂ ಹೆಚ್ಚು ಮತಗಳು ಬರುತ್ತವೆ ಎಂಬ ನಿರೀಕ್ಷೆ ಇತ್ತು. ಈ ಬಾರಿ ಅದೃಷ್ಟ ಕೈ ಹಿಡಿಯಲಿಲ್ಲ,” ಎಂದರು.
ಪಕ್ಷದ ಭವಿಷ್ಯ ಕುರಿತು ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಶ್ರಮದಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಲವಾಗಿ ಬೆಳೆದಿದೆ. ಅದೇ ರೀತಿ ರಾಜ್ಯದಲ್ಲಿಯೂ 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ದಿಟ್ಟತನವನ್ನು ಉಲ್ಲೇಖಿಸಿದ ಅವರು, “ಅವರ ಮಗನಾಗಿ ನಾನು ಕೂಡ ಅದೇ ದೃಢತೆಯಿಂದ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ,” ಎಂದರು.
ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಟೀಕಿಸಿದ ಅವರು, “ಗೃಹಲಕ್ಷ್ಮಿ ಯೋಜನೆ ಚುನಾವಣಾ ಸಂದರ್ಭದಲ್ಲಿ ಹಣ ಬಿಡುಗಡೆ ಮಾಡುವುದಕ್ಕೆ ಬಳಸಲಾಗುತ್ತಿದೆ. ಮುಂದಿನ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗಳ ಸಂದರ್ಭದಲ್ಲಿಯೂ ಇದೇ ರೀತಿಯ ಪ್ರಯತ್ನ ನಡೆಯಬಹುದು,” ಎಂದು ಆರೋಪಿಸಿದರು.
ಈ ವೇಳೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.












