ನವದೆಹಲಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಯೋಜನೆಯಡಿ ಹೆಸರುಕಾಳು, ಉದ್ದು, ಸೋಯಾಬೀನ್, ಸೂರ್ಯಕಾಂತಿ ಮತ್ತು ಶೇಂಗಾದಂತಹ ಕೃಷಿ ಉತ್ಪನ್ನಗಳನ್ನು ತಕ್ಷಣ ಖರೀದಿಸಲು ಅನುಮೋದನೆ ನೀಡುವಂತೆ ಕರ್ನಾಟಕದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ ಆಯೋಜಿಸಿದ್ದ ರಾಷ್ಟ್ರೀಯ ರಬಿ ಅಭಿಯಾನ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಪ್ರಸ್ತುತ ಬೆಲೆ ಬೆಂಬಲ ಯೋಜನೆ (PSS) ಅಡಿಯಲ್ಲಿ ಖರೀದಿಯಾಗುವ ಹೆಸರುಕಾಳು, ಉದ್ದು, ಸೂರ್ಯಕಾಂತಿ, ಸೋಯಾಬೀನ್ ಮತ್ತು ಶೇಂಗಾದ ಬೆಲೆಗಳು ಎಂಎಸ್ಪಿಗಿಂತ ಕಡಿಮೆ ಇವೆ. ಇದರಿಂದ ಕರ್ನಾಟಕದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬೆಳೆಗಳನ್ನು ತಕ್ಷಣವೇ ಖರೀದಿಸಲು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಅನುಮೋದನೆ ನೀಡಬೇಕು,” ಎಂದು ಮನವಿ ಮಾಡಿದರು.
ಕೇಂದ್ರ ಸರ್ಕಾರದಿಂದ ಕಳೆದ ಕೆಲವು ವರ್ಷಗಳಿಂದ ರಾಜ್ಯಕ್ಕೆ ನಿರಂತರ ಬೆಂಬಲ ಮತ್ತು ಸಹಕಾರ ದೊರೆಯುತ್ತಿರುವುದಕ್ಕೆ ಧನ್ಯವಾದ ಸೂಚಿಸಿದ ಚಲುವರಾಯಸ್ವಾಮಿ, “SMAM, RKVY, ATMA, PMSKY, WDC ಮತ್ತು PDPS ಯೋಜನೆಗಳ ಮೂಲಕ ರೈತರಿಗೆ ಸಹಾಯ ಮಾಡಲಾಗಿದೆ. ವಿಶೇಷವಾಗಿ ಕರ್ನಾಟಕದ ಮಾವು ಬೆಳೆಗಾರರಿಗೆ ನೀಡಿದ ಸಹಕಾರಕ್ಕೆ ನಾವು ಆಭಾರಿಯಾಗಿದ್ದೇವೆ,” ಎಂದರು.
“ಬೆಲೆ ಕುಸಿತದಿಂದ ಸಂಕಷ್ಟದಲ್ಲಿರುವ ರೈತರ ತುರ್ತು ಅಗತ್ಯಗಳನ್ನು ಪೂರೈಸಿ, ಅವರನ್ನು ಆರ್ಥಿಕ ಬಿಕ್ಕಟ್ಟಿನಿಂದ ಪಾರು ಮಾಡಬೇಕು,” ಎಂದು ಅವರು ಕೇಂದ್ರ ಸರ್ಕಾರವನ್ನು ಕೋರಿದರು.
ಯಾಂತ್ರೀಕೃತ ಕೃಷಿಗೆ ಒತ್ತು: ಕರ್ನಾಟಕದ ರೈತರು ಯಾಂತ್ರೀಕೃತ ಕೃಷಿ ಪದ್ಧತಿಗಳನ್ನು ಹೆಚ್ಚಾಗಿ ಅಳವಡಿಸಿಕೊಳ್ಳುತ್ತಿದ್ದಾರೆ. ಇದರಿಂದ SMAM ಯೋಜನೆಗೆ ಹೆಚ್ಚಿನ ಬೇಡಿಕೆ ಉಂಟಾಗಿದೆ. ಆದ್ದರಿಂದ, 2025-26ನೇ ಸಾಲಿಗೆ ರಾಜ್ಯಕ್ಕೆ ಹೆಚ್ಚುವರಿಯಾಗಿ 200 ಕೋಟಿ ರೂಪಾಯಿಗಳ ಅನುದಾನ ನೀಡಬೇಕೆಂದು ಸಚಿವರು ಮನವಿ ಮಾಡಿದರು.
ರಸಗೊಬ್ಬರ ಪೂರೈಕೆ: “ಏಪ್ರಿಲ್ನಿಂದ ಸೆಪ್ಟೆಂಬರ್ 2025ರ ಅವಧಿಗೆ ರಾಜ್ಯಕ್ಕೆ ಪೂರೈಸಬೇಕಿದ್ದ 3.36 ಲಕ್ಷ ಮೆಟ್ರಿಕ್ ಟನ್ ಯೂರಿಯಾ ರಸಗೊಬ್ಬರ ಇನ್ನೂ ಬಾಕಿಯಿದೆ. ಇದನ್ನು ಆದಷ್ಟು ಬೇಗ ಪೂರೈಸಲು ಕ್ರಮ ಕೈಗೊಳ್ಳಬೇಕು,” ಎಂದು ಚಲುವರಾಯಸ್ವಾಮಿ ಒತ್ತಾಯಿಸಿದರು.
ಕೃಷಿ ವಿಶ್ವವಿದ್ಯಾಲಯಕ್ಕೆ ಮಾನ್ಯತೆ: ಮಂಡ್ಯದಲ್ಲಿ ಹೊಸದಾಗಿ ಸ್ಥಾಪಿತವಾದ ಕೃಷಿ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಐಸಿಎಆರ್ನಿಂದ ಔಪಚಾರಿಕ ಮಾನ್ಯತೆ ಮತ್ತು ಅಗತ್ಯ ಅನುದಾನ ನೀಡಬೇಕು. ಜೊತೆಗೆ, ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಿಂದ ಎಲ್ಲಾ ಕೃಷಿ ವಿಜ್ಞಾನ ಕೇಂದ್ರಗಳು (KVK) ಮತ್ತು ಅಖಿಲ ಭಾರತ ಸಮನ್ವಯ ಸಂಶೋಧನಾ ಯೋಜನೆ (AICRP) ಕೇಂದ್ರಗಳನ್ನು ಮಂಡ್ಯ ವಿಶ್ವವಿದ್ಯಾಲಯಕ್ಕೆ ವರ್ಗಾಯಿಸಬೇಕೆಂದು ಅವರು ಕೋರಿದರು.
ಆರ್ಕೆವಿವೈ ಯೋಜನೆಗೆ ಒತ್ತು: ರೈತರ ಕಲ್ಯಾಣಕ್ಕಾಗಿ ಆರ್ಕೆವಿವೈ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಿ, ಅಗತ್ಯವಿರುವ ಹೆಚ್ಚುವರಿ ನಿಧಿಯನ್ನು ಮಂಜೂರು ಮಾಡಬೇಕೆಂದು ಸಚಿವರು ಮನವಿ ಮಾಡಿದರು.
“ಕರ್ನಾಟಕದ ರೈತರ ಹಿತ ಕಾಪಾಡಲು ಕೇಂದ್ರ ಸರ್ಕಾರದ ಬೆಂಬಲ ಮತ್ತು ಸಕಾರಾತ್ಮಕ ಪ್ರತಿಕ್ರಿಯೆಯನ್ನು ಎದುರು ನೋಡುತ್ತಿದ್ದೇವೆ. ಇದರಿಂದ ರೈತರ ಜೀವನ ಇನ್ನಷ್ಟು ಉತ್ತಮವಾಗುತ್ತದೆ ಎಂಬ ವಿಶ್ವಾಸವಿದೆ,” ಎಂದು ಚಲುವರಾಯಸ್ವಾಮಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ರಾಜ್ಯ ಸಚಿವ ಭಗೀರಥ ಚೌಧರಿ, ವಿವಿಧ ರಾಜ್ಯಗಳ ಕೃಷಿ ಸಚಿವರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.