ಹಾಸನ: ಹಾಸನ ಲೋಕಸಭಾ ಸದಸ್ಯ ಶ್ರೇಯಸ್ ಪಟೇಲ್ ಅವರ ನೇತೃತ್ವದಲ್ಲಿ ಸೋಮವಾರ ಬೆಳಗ್ಗೆಯಿಂದ ಹೆಮಾವತಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ (ದಿಶಾ) ಸಭೆ ಆರಂಭವಾಗಿದೆ. ಆದರೆ ಈ ಸಭೆಗೆ ಜಿಲ್ಲೆಯ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಗೈರು ಹಾಜರಾಗಿ ಕೈ ಕೊಟ್ಟಿದ್ದಾರೆ.
ಜಿಲ್ಲೆಯ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಲು ಮತ್ತು ಪ್ರಗತಿ ಪರಿಶೀಲಿಸಲು ಕರೆಯಲಾಗಿದ್ದ ಈ ಮಹತ್ವದ ಸಭೆಗೆ ಕೇವಲ ಕಾಂಗ್ರೆಸ್ ಶಾಸಕರೊಬ್ಬರಾದ ಅರಸೀಕೆರೆಯ ಶಿವಲಿಂಗೇಗೌಡ ಮತ್ತು ಸಂಸದ ಶ್ರೇಯಸ್ ಪಟೇಲ್ ಆಗಮಿಸಿದ್ದಾರೆ. ಉಳಿದಂತೆ ಜೆಡಿಎಸ್ ಮತ್ತು ಬಿಜೆಪಿ ಶಾಸಕರು ಯಾರೂ ಭಾಗವಹಿಸದೇ ಇರುವುದು ಗಮನ ಸೆಳೆದಿದೆ.
ಸಭೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಸಂಸದ ಶ್ರೇಯಸ್ ಪಟೇಲ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೆಲಸ ಮಾಡದ ಅಧಿಕಾರಿಗಳನ್ನು ಕೂಡಲೇ ಸಸ್ಪೆಂಡ್ ಮಾಡಿ” ಎಂದು ಆಗ್ರಹಿಸಿ ಸಿಡಿಮಿಡಿಗೊಂಡಿದ್ದಾರೆ.
ದಿಶಾ ಸಭೆಯಲ್ಲಿ ಸಂಸದರ ನೇತೃತ್ವದಲ್ಲಿ ಎಲ್ಲ ಶಾಸಕರು ಹಾಜರಾಗಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಕಡ್ಡಾಯವಾಗಿದ್ದರೂ, ವಿರೋಧ ಪಕ್ಷಗಳ ಶಾಸಕರು ಸತತವಾಗಿ ಗೈರು ಹಾಜರಾಗುತ್ತಿರುವುದು ರಾಜಕೀಯ ತಳ್ಳಾಟಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಸಭೆಯಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.












