ನವದೆಹಲಿ: ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಉಕ್ಕು ಸಚಿವಾಲಯದ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ವಿವರವಾದ ಚರ್ಚೆ ನಡೆಸಿದರು.
ಸಂಸತ್ತಿನಲ್ಲಿ ಹಣಕಾಸು ಸಚಿವರ ಕಚೇರಿಯಲ್ಲಿ ನಡೆದ ಈ ಭೇಟಿಯಲ್ಲಿ ಉಕ್ಕು ಸಚಿವಾಲಯದ ಹಿರಿಯ ಅಧಿಕಾರಿಗಳು ಸಹ ಭಾಗವಹಿಸಿದ್ದರು. ಉಕ್ಕು ವಲಯದಲ್ಲಿ ಹೊಸ ಹೂಡಿಕೆಗಳು, ಪ್ರಸ್ತುತ ನಡೆಯುತ್ತಿರುವ ಯೋಜನೆಗಳು ಮತ್ತು ವಲಯವನ್ನು ಮತ್ತಷ್ಟು ಬಲಪಡಿಸುವ ಕುರಿತು ಸಮಾಲೋಚನೆ ನಡೆಯಿತು ಎಂದು ಸಚಿವ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಚರ್ಚೆಯಲ್ಲಿ ಸುಸ್ಥಿರ ಬೆಳವಣಿಗೆಯನ್ನು ಉತ್ತೇಜಿಸುವ ಮತ್ತು ವಿಕಸಿತ ಭಾರತ @2047 ದೃಷ್ಟಿಕೋನವನ್ನು ಮುನ್ನಡೆಸುವ ಭವಿಷ್ಯದ ಕೇಂದ್ರ ಆಯವ್ಯಯದ ಬಗ್ಗೆಯೂ ಮಾತುಕತೆ ನಡೆದಿದೆ. ಇತ್ತೀಚಿನ ಬಜೆಟ್ ಮಂಡನೆಗಾಗಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದೇನೆ ಎಂದು ಸಚಿವ ಕುಮಾರಸ್ವಾಮಿ ಹೇಳಿದರು.
ಉಕ್ಕು ವಲಯದ ಬೆಳವಣಿಗೆ ಮತ್ತು ಹೊಸ ಹೂಡಿಕೆಗಳ ಮೂಲಕ ದೇಶದ ಉದ್ಯಮ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವದ್ದಾಗಿದೆ.












