ಬೆಂಗಳೂರು: ಭಾರತ ಚುನಾವಣಾ ಆಯೋಗವು ಹೊರಡಿಸಿರುವ ಅಧಿಸೂಚನೆಯಂತೆ ಕರ್ನಾಟಕ ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆ -2026 ಸಂಬಂಧಿಸಿದಂತೆ 2026 ನೇ ಜೂನ್ 01 ರಿಂದ ನಾಮಪತ್ರ ಸಲ್ಲಿಕೆ ಹಾಗೂ ಜೂನ್ 08 ನಾಮಪತ್ರ ಸಲ್ಲಿಕೆಯ ಕಡೆಯ ದಿನವಾಗಿತ್ತು. ಜೂನ್ 11 ರಂದು ನಾಮಪತ್ರ ಹಿಂಪಡೆಯಲು ದಿನಾಂಕ ನಿಗದಿಪಡಿಸಲಾಗಿದ್ದು, ಚುನಾವಣೆ ಅಗತ್ಯವಿದ್ದಲ್ಲಿ 2026 ನೇ ಜೂನ್ 18 ಕ್ಕೆ ನಿಗದಿಪಡಿಸಲಾಗಿತ್ತು.
ಈ ಸಂಬಂಧ ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಬೇಕಿದ್ದ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಎಂ. ನಾಗರಾಜ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಪವನ್ ಖೇರ, ಮನ್ಸೂರ್ ಅಲಿ ಖಾನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಭೋಜಣ್ಣ ಸ್ವಾಮಿ ಅವರು ಉಮೇದುವಾರಿಕೆ ಸಲ್ಲಿಸಿದ್ದರು.
ಅಭ್ಯರ್ಥಿಗಳು ಉಮೇದುವಾರಿಕೆಯನ್ನು ಸಲ್ಲಿಸಿರುವ ಬಗ್ಗೆ 2026ನೇ ಜೂನ್ 09 ರಂದು ಪರಿಶೀಲನೆ ನಡೆಸಲಾಯಿತು. ಪಕ್ಷೇತರ ಅಭ್ಯರ್ಥಿ ಭೋಜಣ್ಣ ಸ್ವಾಮಿ ಅವರು ಸಲ್ಲಿಸಿದ ನಾಮಪತ್ರ ತಿರಸ್ಕೃತಗೊಂಡ ಕಾರಣ ಇಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿಗಳು ಹಾಗೂ ಚುನಾವಣಾಧಿಕಾರಿಯಾದ ಎಂ.ಕೆ. ವಿಶಾಲಾಕ್ಷಿ ಅವರು ಫಲಿತಾಂಶವನ್ನು ಪ್ರಕಟಿಸಿದ್ದು, ಭಾರತೀಯ ಜನತಾ ಪಾರ್ಟಿ ಅಭ್ಯರ್ಥಿಯಾಗಿ ಎಂ. ನಾಗರಾಜ, ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಅಭ್ಯರ್ಥಿಗಳಾಗಿ ಪವನ್ ಖೇರ, ಮನ್ಸೂರ್ ಅಲಿ ಖಾನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










