ಬೆಂಗಳೂರು: ರಾಜ್ಯದ ಏಕೈಕ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಅಸ್ತಿತ್ವವೇ ಅಪಾಯದಲ್ಲಿದ್ದು, ವಿದ್ಯಾರ್ಥಿಗಳ ಸಂಖ್ಯೆ ತೀವ್ರವಾಗಿ ಕುಸಿದಿರುವುದಕ್ಕೆ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, 2022-23ನೇ ಶೈಕ್ಷಣಿಕ ವರ್ಷದಲ್ಲಿ 740 ವಿದ್ಯಾರ್ಥಿಗಳಿದ್ದ ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನಲ್ಲಿ ಕೇವಲ 160 ವಿದ್ಯಾರ್ಥಿಗಳು ಮಾತ್ರ ದಾಖಲಾತಿಯಾಗಿದ್ದಾರೆ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಕೊರತೆಯಿಂದ 15 ವಿಭಾಗಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಇದು ರಾಜ್ಯದ ಸಾಂಸ್ಕೃತಿಕ ಪರಂಪರೆಯ ಸಂರಕ್ಷಣೆಗೆ ಗಂಭೀರ ಎಚ್ಚರಿಕೆಯಾಗಿದೆ ಎಂದು ಹೇಳಿದ್ದಾರೆ.
ಮೂಲಸೌಕರ್ಯಗಳ ಕೊರತೆ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಖಾಲಿ ಹುದ್ದೆಗಳು, ಆಡಳಿತಾತ್ಮಕ ವೈಫಲ್ಯ ಹಾಗೂ ದೂರದೃಷ್ಟಿಯಿಲ್ಲದ ನೀತಿಗಳ ಪರಿಣಾಮವಾಗಿ ವಿಶ್ವವಿದ್ಯಾಲಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಅಶೋಕ್ ಆರೋಪಿಸಿದ್ದಾರೆ.
ಕನ್ನಡ, ನಾಡು-ನುಡಿ ಮತ್ತು ಸಂಸ್ಕೃತಿಯ ಬಗ್ಗೆ ಭಾಷಣ ಮಾಡುವುದರಲ್ಲಿ ಮಾತ್ರ ಸರ್ಕಾರ ಆಸಕ್ತಿ ತೋರಿಸುತ್ತಿದ್ದು, ಕನ್ನಡದ ಪರಂಪರೆಯನ್ನು ಉಳಿಸುವ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಅಗತ್ಯ ಗಮನ ನೀಡುತ್ತಿಲ್ಲ ಎಂದು ಅವರು ಟೀಕಿಸಿದ್ದಾರೆ. ಗ್ಯಾರಂಟಿ ಯೋಜನೆಗಳು, ಕಮಿಷನ್ ರಾಜಕಾರಣ ಹಾಗೂ ವರ್ಗಾವಣೆ ರಾಜಕೀಯದಲ್ಲಿ ನಿರತವಾಗಿರುವ ಸರ್ಕಾರಕ್ಕೆ ಜಾನಪದ ಪರಂಪರೆಯ ಸಂರಕ್ಷಣೆ ಪ್ರಮುಖವಾಗಿಲ್ಲ ಎಂದು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಷಣವೇ ಕರ್ನಾಟಕ ಜಾನಪದ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಬೇಕು. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದರ ಜೊತೆಗೆ ಉದ್ಯೋಗಾಧಾರಿತ ಹೊಸ ಕೋರ್ಸ್ಗಳನ್ನು ಆರಂಭಿಸಿ ವಿಶ್ವವಿದ್ಯಾಲಯವನ್ನು ಪುನಶ್ಚೇತನಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಇಲ್ಲವಾದರೆ ಕನ್ನಡದ ಹೆಸರಿನಲ್ಲಿ ರಾಜಕೀಯ ಮಾಡುತ್ತಾ, ಕನ್ನಡದ ಹೆಮ್ಮೆಯ ಸಂಸ್ಥೆಗಳನ್ನೇ ನಿರ್ಲಕ್ಷಿಸಿದ ಸರ್ಕಾರ ಎಂಬ ಅಪಖ್ಯಾತಿಯಿಂದ ಕಾಂಗ್ರೆಸ್ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಆರ್. ಅಶೋಕ್ ಎಚ್ಚರಿಕೆ ನೀಡಿದ್ದಾರೆ.
ಈ ಸಂಬಂಧ #SaveJanapadaUniversity ಅಭಿಯಾನಕ್ಕೆ ಬೆಂಬಲ ಸೂಚಿಸಿರುವ ಅವರು, ರಾಜ್ಯ ಸರ್ಕಾರ ತಕ್ಷಣವೇ ಮಧ್ಯಪ್ರವೇಶಿಸಿ ವಿಶ್ವವಿದ್ಯಾಲಯದ ಉಳಿವಿಗೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.











