ಬೆಂಗಳೂರು: ಹಿರಿಯ ರಾಜಕಾರಣಿ, ದಕ್ಷ ಆಡಳಿತಗಾರ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ. ಕೃಷ್ಣ ಅವರ ಸ್ಮರಣಾರ್ಥ ವಿಕಾಸಸೌಧದ ಆವರಣದಲ್ಲಿ ಪ್ರತಿಮೆ ಸ್ಥಾಪಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಲ್ಲಿ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಅವರು, “ಎಸ್.ಎಂ. ಕೃಷ್ಣ ಅವರು ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ರೂಪಿಸಿದವರು. ಅವರ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ವಿಕಾಸಸೌಧದ ಆವರಣದಲ್ಲಿ ಅಥವಾ ಸರ್ಕಾರ ಆಯ್ಕೆ ಮಾಡುವ ಸೂಕ್ತ ಸ್ಥಳದಲ್ಲಿ ಅವರ ಪ್ರತಿಮೆ ಸ್ಥಾಪಿಸುವುದರಿಂದ ಆದರ್ಶ ನಾಯಕರಿಗೆ ಶಾಶ್ವತ ಗೌರವ ಸಲ್ಲಿಸಿದಂತಾಗುತ್ತದೆ” ಎಂದು ತಿಳಿಸಿದ್ದಾರೆ.
ಎಸ್.ಎಂ. ಕೃಷ್ಣ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಉತ್ತೇಜನ ನೀಡುವ ಮೂಲಕ ಬೆಂಗಳೂರನ್ನು ‘ಸಿಲಿಕಾನ್ ಸಿಟಿ’ಯಾಗಿ ಬೆಳೆಸುವಲ್ಲಿ ಅವರ ಪಾತ್ರ ಸ್ಮರಣೀಯವಾಗಿದೆ. ತಂತ್ರಜ್ಞಾನ, ಶಿಕ್ಷಣ, ಕೈಗಾರಿಕೆ ಹಾಗೂ ನಗರಾಭಿವೃದ್ಧಿಗೆ ಅವರು ನೀಡಿದ ಆದ್ಯತೆ ಕರ್ನಾಟಕದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿತು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಎಸ್.ಎಂ. ಕೃಷ್ಣ ಅವರು ರಾಜ್ಯಸಭಾ ಸದಸ್ಯರಾಗಿ, ಕೇಂದ್ರ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿ ರಾಜ್ಯ ಮತ್ತು ದೇಶದ ಗೌರವವನ್ನು ಹೆಚ್ಚಿಸಿದ್ದರು ಎಂದು ಗೋವಿಂದರಾಜ್ ಅವರು ತಿಳಿಸಿದ್ದಾರೆ.
ಸರ್ಕಾರವು ಈ ಮನವಿಯನ್ನು ಪರಿಗಣಿಸಿ, ಎಸ್.ಎಂ. ಕೃಷ್ಣ ಅವರ ಸ್ಮರಣಾರ್ಥ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.











