ಬೆಂಗಳೂರು: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಶಾಸಕರು ಸೋಮವಾರ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ ಕಚೇರಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಎತ್ತಿನಹೊಳೆ ನೀರು ಪೂರೈಕೆ ಯೋಜನೆ ಸೇರಿದಂತೆ ಜಿಲ್ಲೆಗಳ ವಿವಿಧ ಅಭಿವೃದ್ಧಿ ವಿಚಾರಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಿದರು.
ಎತ್ತಿನಹೊಳೆ ಯೋಜನೆಯ ಮೂಲಕ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶವಿದ್ದು, ಯೋಜನೆಯ ಪ್ರಗತಿ, ನೀರು ಪೂರೈಕೆ ವ್ಯವಸ್ಥೆ ಹಾಗೂ ಮುಂದಿನ ಹಂತದ ಕಾಮಗಾರಿಗಳ ಕುರಿತು ಸಭೆಯಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.

ಇದೇ ವೇಳೆ, ಎರಡೂ ಜಿಲ್ಲೆಗಳಿಗೆ ಸಂಬಂಧಿಸಿದ ಕುಡಿಯುವ ನೀರು, ನೀರಾವರಿ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸ್ಥಳೀಯವಾಗಿ ಎದುರಾಗಿರುವ ವಿವಿಧ ಸಮಸ್ಯೆಗಳ ಬಗ್ಗೆಯೂ ಶಾಸಕರು ಮುಖ್ಯಮಂತ್ರಿಯವರ ಗಮನಕ್ಕೆ ತಂದರು. ಜಿಲ್ಲೆಗಳ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಗಳಿಗೆ ಆದ್ಯತೆ ನೀಡಿ ಕ್ರಮ ಕೈಗೊಳ್ಳುವಂತೆ ಶಾಸಕರು ಮನವಿ ಮಾಡಿದರು.
ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಪೊನ್ನಣ್ಣ, ಮಾಜಿ ಸಚಿವ ಹಾಗೂ ಶಾಸಕ ಡಾ. ಎಂ.ಸಿ. ಸುಧಾಕರ್, ಶಾಸಕರಾದ ನಂಜೇಗೌಡ, ನಾರಾಯಣಸ್ವಾಮಿ, ಕೊತ್ತನೂರು ಮಂಜುನಾಥ್, ಪ್ರದೀಪ್ ಈಶ್ವರ್, ಸುಬ್ಬಾರೆಡ್ಡಿ, ಪುಟ್ಟಸ್ವಾಮಿಗೌಡ ಹಾಗೂ ಕೋಲಾರ ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳು ದೀರ್ಘಕಾಲದಿಂದ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಎತ್ತಿನಹೊಳೆ ಯೋಜನೆಗೆ ವಿಶೇಷ ಮಹತ್ವವಿದೆ. ಹೀಗಾಗಿ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಳ್ಳುವುದು ಹಾಗೂ ಜಿಲ್ಲೆಗಳಿಗೆ ಸಮರ್ಪಕ ನೀರು ಪೂರೈಕೆಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಸಭೆಯ ಪ್ರಮುಖ ವಿಚಾರವಾಗಿತ್ತು.











