ನವದೆಹಲಿ: ದಕ್ಷಿಣ ಆಫ್ರಿಕಾದ ಕೇಪ್ಟೌನ್ನಲ್ಲಿ ಸೆಪ್ಟೆಂಬರ್ 13ರಿಂದ 19ರವರೆಗೆ ನಡೆಯಲಿರುವ 69ನೇ ಕಾಮನ್ವೆಲ್ತ್ ಸಂಸದೀಯ ಸಮ್ಮೇಳನ (ಸಿಪಿಸಿ) ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಶ್ರೀ ಗುರುಪಾದನಗೌಡ ಸಂಗನಗೌಡ ಪಾಟೀಲ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಮಹತ್ವದ ಸಮಾಲೋಚನೆ ನಡೆಸಿದರು.
ನವದೆಹಲಿಯ ಸಂಸತ್ ಭವನದ ಅನೆಕ್ಸ್ನ ಮುಖ್ಯ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮುಂಬರುವ ಸಮ್ಮೇಳನದ ಸಿದ್ಧತೆಗಳು, ಸಂಸದೀಯ ಕಾರ್ಯವಿಧಾನಗಳು ಹಾಗೂ ಸಂಬಂಧಿತ ವಿಷಯಗಳ ಕುರಿತು ವಿವರವಾದ ಚರ್ಚೆ ನಡೆಯಿತು. ಕರ್ನಾಟಕ ನಿಯೋಗವನ್ನು ಮುನ್ನಡೆಸಲಿರುವ ಸಭಾಧ್ಯಕ್ಷರು ಸಮ್ಮೇಳನದಲ್ಲಿ ರಾಜ್ಯದ ಪರವಾಗಿ ಪರಿಣಾಮಕಾರಿ ಭಾಗವಹಿಸುವಿಕೆಯ ಬಗ್ಗೆ ಅಭಿಪ್ರಾಯ ವಿನಿಮಯ ಮಾಡಿಕೊಂಡರು.
ಸಂಸದೀಯ ವ್ಯವಸ್ಥೆ ಬಲಪಡಿಸುವ ಕುರಿತು ಚರ್ಚೆ
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹಾಗೂ ರಾಜ್ಯಸಭೆಯ ಉಪಸಭಾಪತಿ ಹರಿವಂಶ್ ನಾರಾಯಣ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸಂಸದೀಯ ವ್ಯವಹಾರಗಳು, ಸಂಸದೀಯ ಸಂಪ್ರದಾಯಗಳು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚಿಸಲಾಯಿತು. ಸಮ್ಮೇಳನದಲ್ಲಿ ಚರ್ಚೆಯಾಗಲಿರುವ ವಿವಿಧ ವಿಷಯಗಳು, ಪ್ರತಿನಿಧಿಗಳ ಭಾಗವಹಿಸುವಿಕೆ ಮತ್ತು ಸಿದ್ಧತೆಗಳ ಬಗ್ಗೆ ಅಗತ್ಯ ಕ್ರಮಗಳನ್ನು ಕುರಿತು ವಿಚಾರ ವಿನಿಮಯ ನಡೆಯಿತು.

ಕಾಮನ್ವೆಲ್ತ್ ರಾಷ್ಟ್ರಗಳ ಸಂಸದೀಯ ಸಹಕಾರಕ್ಕೆ ಒತ್ತು
ಸಂಸದೀಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸಂರಕ್ಷಿಸುವುದು ಹಾಗೂ ಕಾಮನ್ವೆಲ್ತ್ ರಾಷ್ಟ್ರಗಳ ನಡುವಿನ ಸಂಸದೀಯ ಸಹಕಾರವನ್ನು ವೃದ್ಧಿಗೊಳಿಸುವ ನಿಟ್ಟಿನಲ್ಲಿ 69ನೇ ಸಮ್ಮೇಳನ ಮಹತ್ವಪೂರ್ಣವಾಗಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಕರ್ನಾಟಕ ನಿಯೋಗವು ಸಮ್ಮೇಳನದಲ್ಲಿ ರಾಜ್ಯದ ಸಂಸದೀಯ ಅನುಭವ, ಪ್ರಜಾಪ್ರಭುತ್ವದ ಸಂಸ್ಥೆಗಳ ಕಾರ್ಯವೈಖರಿ ಹಾಗೂ ವಿವಿಧ ಕ್ಷೇತ್ರಗಳಲ್ಲಿನ ಅನುಭವಗಳನ್ನು ಹಂಚಿಕೊಳ್ಳುವ ನಿರೀಕ್ಷೆಯಿದೆ.

ಸಭೆಯಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ವಿವಿಧ ರಾಜ್ಯಗಳ ವಿಧಾನಸಭೆಗಳ ಸಭಾಪತಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.
ಸೆಪ್ಟೆಂಬರ್ 13ರಿಂದ 19ರವರೆಗೆ ಕೇಪ್ಟೌನ್ನಲ್ಲಿ ನಡೆಯಲಿರುವ ಈ ಸಮ್ಮೇಳನವು ಕಾಮನ್ವೆಲ್ತ್ ರಾಷ್ಟ್ರಗಳ ಸಂಸದೀಯ ಸಂಸ್ಥೆಗಳ ನಡುವೆ ಅನುಭವ ಹಂಚಿಕೆ, ಉತ್ತಮ ಸಂಸದೀಯ ಪದ್ಧತಿಗಳ ವಿನಿಮಯ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ಬಲವರ್ಧನೆಗೆ ಪ್ರಮುಖ ವೇದಿಕೆಯಾಗಲಿದೆ.











