ನಗರ ಆಡಳಿತ, ಮೂಲಸೌಕರ್ಯ, 24×7 ನೀರು ಸರಬರಾಜು ಮತ್ತು ಸುಸ್ಥಿರ ಸಾರಿಗೆಗೆ ಆದ್ಯತೆ
ಬೆಂಗಳೂರು: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ (ಕೆಇಎಫ್ಡಿಸಿ) ಸಹಯೋಗದಲ್ಲಿ ನಗರದಲ್ಲಿ ಆಯೋಜಿಸಿದ್ದ ಕರ್ನಾಟಕ ನಗರ ಮೂಲಸೌಕರ್ಯ ಮತ್ತು ಹೂಡಿಕೆಗಳ ಶೃಂಗಸಭೆಯನ್ನು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕವು ದೇಶದಲ್ಲಿ ವೇಗವಾಗಿ ನಗರೀಕರಣಗೊಳ್ಳುತ್ತಿರುವ ಮತ್ತು ಆರ್ಥಿಕವಾಗಿ ಅತ್ಯಂತ ಕ್ರಿಯಾಶೀಲ ರಾಜ್ಯಗಳಲ್ಲಿ ಒಂದಾಗಿದೆ ಎಂದು ಸಚಿವರು ತಿಳಿಸಿದರು. ರಾಜ್ಯದ ನಗರಗಳು ಉದ್ಯಮ, ನಾವೀನ್ಯತೆ, ಶಿಕ್ಷಣ, ಉದ್ಯೋಗ ಮತ್ತು ಹೂಡಿಕೆಯ ಪ್ರಮುಖ ಕೇಂದ್ರಗಳಾಗಿ ವೇಗವಾಗಿ ಬೆಳೆಯುತ್ತಿವೆ. ಬೆಂಗಳೂರು ಜಾಗತಿಕ ತಂತ್ರಜ್ಞಾನ ಮತ್ತು ನಾವೀನ್ಯತೆಯ ಕೇಂದ್ರವಾಗಿ ಗುರುತಿಸಿಕೊಂಡಿದ್ದು, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಶಿವಮೊಗ್ಗ ಹಾಗೂ ತುಮಕೂರು ಸೇರಿದಂತೆ ವಿವಿಧ ನಗರಗಳು ಪ್ರಾದೇಶಿಕ ಆರ್ಥಿಕ ಬೆಳವಣಿಗೆಯ ಕೇಂದ್ರಗಳಾಗಿ ಹೊರಹೊಮ್ಮುತ್ತಿವೆ ಎಂದು ಅವರು ಹೇಳಿದರು.

ವೇಗವಾಗಿ ನಡೆಯುತ್ತಿರುವ ನಗರೀಕರಣವು ಹೊಸ ಅವಕಾಶಗಳೊಂದಿಗೆ ದೊಡ್ಡ ಜವಾಬ್ದಾರಿಯನ್ನೂ ತಂದಿದೆ. ನಗರಗಳ ಬೆಳವಣಿಗೆ ಕೇವಲ ಭೌತಿಕ ವಿಸ್ತರಣೆಗೆ ಸೀಮಿತವಾಗದೆ, ಯೋಜಿತ, ಸಮಗ್ರ, ಸುಸ್ಥಿರ ಹಾಗೂ ಪ್ರತಿಯೊಬ್ಬ ನಾಗರಿಕನ ಜೀವನಮಟ್ಟವನ್ನು ಸುಧಾರಿಸುವ ರೀತಿಯಲ್ಲಿ ಸಾಗಬೇಕು. ಇದೇ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಕಾರ್ಯಸೂಚಿಯ ಪ್ರಮುಖ ಆಶಯ ಎಂದು ಸಚಿವರು ಒತ್ತಿ ಹೇಳಿದರು.

ನಾಲ್ಕು ಪ್ರಮುಖ ಆಧಾರ ಸ್ತಂಭಗಳಿಗೆ ಆದ್ಯತೆ
ರಾಜ್ಯದ ನಗರಾಭಿವೃದ್ಧಿಯನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ನಾಲ್ಕು ಪ್ರಮುಖ ಆಧಾರ ಸ್ತಂಭಗಳ ಮೇಲೆ ವಿಶೇಷ ಗಮನಹರಿಸುತ್ತಿದೆ ಎಂದು ಅವರು ತಿಳಿಸಿದರು:
- ಬಲಿಷ್ಠ ನಗರ ಆಡಳಿತ ಮತ್ತು ಸಮಗ್ರ ನಗರ ಯೋಜನೆ
- ಮೂಲಸೌಕರ್ಯ ಅಭಿವೃದ್ಧಿಗೆ ಪರಿಣಾಮಕಾರಿ ಹಣಕಾಸು ವ್ಯವಸ್ಥೆ ಹಾಗೂ ಯೋಜನೆಗಳ ಸಮರ್ಪಕ ಅನುಷ್ಠಾನ
- ಪ್ರತಿಯೊಬ್ಬರಿಗೂ ಸುರಕ್ಷಿತ, ವಿಶ್ವಾಸಾರ್ಹ ಹಾಗೂ ನಿರಂತರ 24×7 ಕುಡಿಯುವ ನೀರು ಮತ್ತು ಒಳಚರಂಡಿ ಸೌಲಭ್ಯ
- ಸುಸ್ಥಿರ, ಸಮಗ್ರ ಹಾಗೂ ಜನಕೇಂದ್ರಿತ ನಗರ ಸಾರಿಗೆ ವ್ಯವಸ್ಥೆ
ನೀರು ಮತ್ತು ಒಳಚರಂಡಿ ಮೂಲಸೌಕರ್ಯಕ್ಕೆ ಒತ್ತು
ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಕಲಬುರಗಿಯಲ್ಲಿ ಅನುಷ್ಠಾನಗೊಳ್ಳುತ್ತಿರುವ 24×7 ನೀರು ಸರಬರಾಜು ಯೋಜನೆಗಳನ್ನು ವಿಸ್ತರಿಸುವುದು, ರಾಜ್ಯದ ವಿವಿಧ ನಗರಗಳಲ್ಲಿ ನೀರು ಮತ್ತು ಒಳಚರಂಡಿ ಮೂಲಸೌಕರ್ಯವನ್ನು ಬಲಪಡಿಸುವುದು ಹಾಗೂ ತ್ಯಾಜ್ಯನೀರಿನ ಸಂಸ್ಕರಣೆ ಮತ್ತು ಮರುಬಳಕೆಗೆ ಉತ್ತೇಜನ ನೀಡುವುದು ಸರ್ಕಾರದ ಪ್ರಮುಖ ಆದ್ಯತೆಗಳಾಗಿವೆ ಎಂದು ಸಚಿವರು ಹೇಳಿದರು. ನಗರಗಳ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ನೀರಿನ ಸಂಪನ್ಮೂಲಗಳ ಸಮರ್ಥ ನಿರ್ವಹಣೆ ಮತ್ತು ಸುಸ್ಥಿರ ನಗರ ಸೇವೆಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದರು.
ಜನಕೇಂದ್ರಿತ ಮತ್ತು ಸುಸ್ಥಿರ ನಗರ ಸಾರಿಗೆ
ನಗರಗಳಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆ ಮತ್ತು ಪ್ರಯಾಣದ ಅಗತ್ಯಗಳಿಗೆ ಪರಿಹಾರ ಕಂಡುಕೊಳ್ಳಲು ಸಾರ್ವಜನಿಕ ಸಾರಿಗೆಯನ್ನು ಬಲಪಡಿಸುವುದು, ಉಪನಗರ ರೈಲು ವ್ಯವಸ್ಥೆ, ಟ್ರಾನ್ಸಿಟ್-ಓರಿಯೆಂಟೆಡ್ ಡೆವಲಪ್ಮೆಂಟ್ (ಟಿಒಡಿ), ಪಾದಚಾರಿ ಮತ್ತು ಸೈಕಲ್ ಮೂಲಸೌಕರ್ಯ ಹಾಗೂ ತಂತ್ರಜ್ಞಾನ ಆಧಾರಿತ ಸಂಚಾರ ನಿರ್ವಹಣಾ ವ್ಯವಸ್ಥೆಗಳಿಗೆ ಉತ್ತೇಜನ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ನಗರ ಸಾರಿಗೆ ವ್ಯವಸ್ಥೆ ವೇಗ, ಸುರಕ್ಷತೆ, ಸುಸ್ಥಿರತೆ ಮತ್ತು ಎಲ್ಲ ವರ್ಗದ ಜನರಿಗೆ ಸುಲಭವಾಗಿ ಲಭ್ಯವಾಗುವಂತಿರಬೇಕು ಎಂಬುದು ಸರ್ಕಾರದ ಉದ್ದೇಶ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸದೃಢತೆ
ನಗರ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯವಿರುವ ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಕ್ರೋಢೀಕರಿಸುವುದು ಅತ್ಯಂತ ಮುಖ್ಯ ಎಂದು ಸಚಿವರು ಹೇಳಿದರು. ಆಸ್ತಿ ತೆರಿಗೆ ಸಂಗ್ರಹಣೆಯ ಸುಧಾರಣೆ, ಜಿಐಎಸ್ ಆಧಾರಿತ ಆಸ್ತಿ ಮೌಲ್ಯಮಾಪನ, ಡಿಜಿಟಲ್ ನಗರ ಸೇವೆಗಳು ಹಾಗೂ ಮುನಿಸಿಪಲ್ ಬಾಂಡ್ಗಳಂತಹ ನವೀನ ಹಣಕಾಸು ವ್ಯವಸ್ಥೆಗಳ ಮೂಲಕ ನಗರಗಳಿಗೆ ಅಗತ್ಯ ಸಂಪನ್ಮೂಲಗಳನ್ನು ಹೆಚ್ಚಿಸುವತ್ತ ಗಮನಹರಿಸಲಾಗುತ್ತಿದೆ ಎಂದರು.
“ನಮ್ಮ ಗುರಿ ಕೇವಲ ನಗರಗಳನ್ನು ವಿಸ್ತರಿಸುವುದಲ್ಲ. ಆರ್ಥಿಕ ಬೆಳವಣಿಗೆಗೆ ವೇಗ ನೀಡುವ, ಪರಿಸರವನ್ನು ಸಂರಕ್ಷಿಸುವ ಹಾಗೂ ಪ್ರತಿಯೊಬ್ಬ ನಾಗರಿಕನಿಗೂ ಉತ್ತಮ ಗುಣಮಟ್ಟದ ಜೀವನವನ್ನು ಒದಗಿಸುವ ಭವಿಷ್ಯಸಿದ್ಧ ನಗರಗಳನ್ನು ನಿರ್ಮಿಸುವುದಾಗಿದೆ,” ಎಂದು ಸಚಿವರು ಹೇಳಿದರು.

ಕರ್ನಾಟಕದ ನಗರಗಳ ಬೆಳವಣಿಗೆಯನ್ನು ಮುಂದಿನ ಪೀಳಿಗೆಯ ಅಗತ್ಯಗಳಿಗೆ ತಕ್ಕಂತೆ ರೂಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ. ಸಾರ್ವಜನಿಕ ಮತ್ತು ಖಾಸಗಿ ವಲಯದ ಸಹಭಾಗಿತ್ವ, ನವೀನ ಹಣಕಾಸು ಮಾದರಿಗಳು ಹಾಗೂ ತಂತ್ರಜ್ಞಾನಗಳ ಪರಿಣಾಮಕಾರಿ ಬಳಕೆಯ ಮೂಲಕ ರಾಜ್ಯದ ನಗರ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕೆಇಎಫ್ಡಿಸಿ ಅಧ್ಯಕ್ಷ ಎಸ್.ಎನ್. ನಾರಾಯಣಸ್ವಾಮಿ, ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಬಿಬಿ ಕಾವೇರಿ ಹಾಗೂ ಕೆಇಎಫ್ಡಿಸಿ ವ್ಯವಸ್ಥಾಪಕ ನಿರ್ದೇಶಕ ಭೂ ಬಾಲನ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.











