ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ), ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ಇಂದು ಮಂಗಳೂರು ಮಹಾನಗರ ಪಾಲಿಕೆಯ ಮಂಗಳ ಸಭಾಂಗಣದಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಸಭೆಯಲ್ಲಿ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ನಡೆಯುತ್ತಿರುವ ನಗರಾಭಿವೃದ್ಧಿ ಕಾಮಗಾರಿಗಳ ಪ್ರಗತಿ, ಕುಡಿಯುವ ನೀರು, ಒಳಚರಂಡಿ, ಬೀದಿ ದೀಪ, ಮಾರುಕಟ್ಟೆ, ಇ-ಖಾತಾ, ತ್ಯಾಜ್ಯ ನಿರ್ವಹಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಸಮಗ್ರವಾಗಿ ಪರಿಶೀಲಿಸಲಾಯಿತು. ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯ ಮತ್ತು ಸಹಕಾರದೊಂದಿಗೆ ಕಾರ್ಯನಿರ್ವಹಿಸಿ, ಕೈಗೆತ್ತಿಕೊಂಡಿರುವ ಅಭಿವೃದ್ಧಿ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ರಾಜ್ಯದ 13 ಮಹಾನಗರ ಪಾಲಿಕೆಗಳನ್ನು ಡಿಜಿಟಲೀಕರಣಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಪಾಲಿಕೆಗಳ ಎಲ್ಲಾ ಸೇವೆಗಳು ಹಾಗೂ ಅಗತ್ಯ ಮಾಹಿತಿಗಳು ಸಾರ್ವಜನಿಕರಿಗೆ ಸುಲಭವಾಗಿ ಡಿಜಿಟಲ್ ರೂಪದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.
ಮುಂದಿನ 25 ವರ್ಷಗಳ ನಗರದ ಅಗತ್ಯವನ್ನು ಗಮನದಲ್ಲಿಟ್ಟುಕೊಂಡು ನೀರು ಸಂಗ್ರಹಣಾ ಘಟಕಗಳನ್ನು ಮೇಲ್ದರ್ಜೆಗೇರಿಸುವಂತೆ ಸೂಚಿಸಲಾಯಿತು. ಮಂಗಳೂರಿನಲ್ಲಿ ಒಟ್ಟು 96,300 ಮನೆಗಳ ನಳ ಸಂಪರ್ಕಗಳ ಪೈಕಿ 39,182 ಸಂಪರ್ಕಗಳು ಪೂರ್ಣಗೊಂಡಿದ್ದು, ಬಾಕಿ ಇರುವ 57,118 ಸಂಪರ್ಕ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು. ಪ್ರಸ್ತುತ ನಗರದ ಶೇ.65ರಷ್ಟು ಪ್ರದೇಶದಲ್ಲಿ (86.09 ಚದರ ಕಿಲೋಮೀಟರ್) ಒಳಚರಂಡಿ ವ್ಯವಸ್ಥೆ ಲಭ್ಯವಿದ್ದು, ಉಳಿದ ಪ್ರದೇಶಗಳಿಗೂ ಹಂತ ಹಂತವಾಗಿ ವಿಸ್ತರಿಸಲು ಸೂಚಿಸಲಾಯಿತು.
ನಗರದಲ್ಲಿ ಈಗಾಗಲೇ ಶೇ.55.6ರಷ್ಟು, ಅಂದರೆ 36,643 ಬೀದಿ ದೀಪಗಳನ್ನು ಅಳವಡಿಸಲಾಗಿದ್ದು, ಉಳಿದ ಪ್ರದೇಶಗಳಲ್ಲಿಯೂ ಬೀದಿ ದೀಪಗಳನ್ನು ಶೀಘ್ರವಾಗಿ ಅಳವಡಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಯಿತು.

ಸರ್ಕಾರಿ-ಖಾಸಗಿ ಸಹಭಾಗಿತ್ವದ (PPP) ಮಾದರಿಯಲ್ಲಿ ಸುಮಾರು ₹150 ಕೋಟಿ ವೆಚ್ಚದಲ್ಲಿ 586 ಮಳಿಗೆಗಳೊಂದಿಗೆ ನಿರ್ಮಾಣಗೊಳ್ಳುತ್ತಿರುವ ಸೆಂಟ್ರಲ್ ಮಾರುಕಟ್ಟೆ ಕಾಮಗಾರಿ ಬಹುತೇಕ ಪೂರ್ಣಗೊಂಡಿರುವುದನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ಜೊತೆಗೆ ಕಂಕನಾಡಿ, ಕದ್ರಿ, ಉರ್ವ ಹಾಗೂ ಸುರತ್ಕಲ್ ಮಾರುಕಟ್ಟೆಗಳ ನಿರ್ಮಾಣ ಕಾಮಗಾರಿಗಳ ಪ್ರಗತಿಯನ್ನೂ ಪರಿಶೀಲಿಸಿ, ಬಾಕಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಯಿತು.
ನಗರದಲ್ಲಿ ಪ್ರತಿದಿನ ಉತ್ಪತ್ತಿಯಾಗುವ ಸುಮಾರು 120 ಟನ್ ಹಸಿಕಸ, 125 ಟನ್ ಮಿಶ್ರಿತ ಕಸ, 15 ಟನ್ ಎಳನೀರು/ತೆಂಗಿನಕಾಯಿ ತ್ಯಾಜ್ಯ ಹಾಗೂ 5 ಟನ್ ಸ್ಯಾನಿಟರಿ ತ್ಯಾಜ್ಯ, ಜೊತೆಗೆ ವಾರಕ್ಕೆ ಉತ್ಪತ್ತಿಯಾಗುವ ಸುಮಾರು 250 ಟನ್ ಒಣಕಸವನ್ನು ಶೇ.100ರಷ್ಟು ಮೂಲದಲ್ಲಿಯೇ ವಿಂಗಡಿಸುವಂತೆ ಸಚಿವರು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ತ್ಯಾಜ್ಯ ವಿಂಗಡಣೆ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಮಂಗಳೂರು ನಗರದಲ್ಲಿ ಒಟ್ಟು 2,22,256 ಇ-ಖಾತಾಗಳ ಪೈಕಿ 68,603 ಇ-ಖಾತಾಗಳನ್ನು ವಿತರಿಸಲಾಗಿದ್ದು, ಬಾಕಿ ಇರುವ ಇ-ಖಾತಾಗಳ ವಿತರಣೆ ಪ್ರಕ್ರಿಯೆಯನ್ನು ತ್ವರಿತಗೊಳಿಸುವಂತೆ ಸೂಚಿಸಲಾಯಿತು. ಅರ್ಹ ಸಾರ್ವಜನಿಕರಿಗೆ ಖಾತೆಗಳು ಹಾಗೂ ನಿವೇಶನ ಸಂಬಂಧಿತ ಸೇವೆಗಳು ವಿಳಂಬವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶಿಸಿದರು.

ಸಾರ್ವಜನಿಕ ಶೌಚಾಲಯಗಳನ್ನು ಸ್ವಚ್ಛವಾಗಿ ಹಾಗೂ ಸುಸ್ಥಿತಿಯಲ್ಲಿಡಬೇಕು. ನಗರದ ಸಮಗ್ರ ನಿರ್ವಹಣೆ ಹಾಗೂ ಸಾರ್ವಜನಿಕ ಸೇವೆಗಳ ಮೇಲ್ವಿಚಾರಣೆಗೆ ಸ್ಮಾರ್ಟ್ ಸಿಟಿ ಯೋಜನೆಯ ‘ಕಮಾಂಡ್ ಸೆಂಟರ್’ ಅನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರಾದ ಡಾ. ಭರತ್ ಶೆಟ್ಟಿ ವೈ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಐವನ್ ಡಿಸೋಜಾ, ಶ್ರೀ ಮೋಹನ್ ಪಿ.ವಿ., ಶ್ರೀ ಕಿಶೋರ್ ಕುಮಾರ್ ಬೋಟ್ಯಾಡಿ, ಮೂಡಾ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿ, ಮಾಜಿ ಮೇಯರ್ ಶ್ರೀ ಭಾಸ್ಕರ್ ಮೊಯ್ಲಿ, ರಾಜ್ಯ ಬೀಜ ಮತ್ತು ಜೈವಿಕ ಪ್ರಮಾಣೀಕರಣ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಲಾವಣ್ಯ ಬಲ್ಲಾಳ್ ಜೈನ್, ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ರಾಹುಲ್ ರತ್ನಂ ಪಾಂಡೆ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಶ್ರೀ ಮೊಹಮ್ಮದ್ ನಜೀರ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.











