ಮಂಗಳೂರು: ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಿದ ಬೆನ್ನಲ್ಲೇ ಉಪಮುಖ್ಯಮಂತ್ರಿ ಹಾಗೂ ಸಚಿವ ಡಿ.ಕೆ. ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಮಂಗಳೂರು ಬಂದರಿಗೆ ದಿಢೀರ್ ಭೇಟಿ ನೀಡಿ ಮೀನುಗಾರರು ಹಾಗೂ ಬಂದರು ವ್ಯಾಪಾರಿಗಳ ಸಮಸ್ಯೆಗಳನ್ನು ಆಲಿಸಿದರು.
ಬೆಳಗ್ಗೆ 6 ಗಂಟೆಗೆ ಬಂದರಿಗೆ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು ಬೋಟ್ನಲ್ಲಿ ಬಂದರು ಪ್ರದೇಶವನ್ನು ಪರಿಶೀಲಿಸಿದರು. ಬಂದರಿನ ಅಭಿವೃದ್ಧಿಗೆ ಈಗಾಗಲೇ ಕೈಗೊಂಡಿರುವ ಯೋಜನೆಗಳು, ಎದುರಾಗಿರುವ ಸಮಸ್ಯೆಗಳು ಹಾಗೂ ಮುಂದಿನ ಅಭಿವೃದ್ಧಿ ಕಾರ್ಯಗಳ ಕುರಿತು ಅಧಿಕಾರಿಗಳು ಮತ್ತು ಮೀನುಗಾರರ ಮುಖಂಡರಿಂದ ಮಾಹಿತಿ ಪಡೆದರು.

ಮೀನುಗಾರರ ಸಂಘದ ಮಾಜಿ ಅಧ್ಯಕ್ಷರಾದ ಚೇತನ್ ಬೆಂಗ್ರೆ ಹಾಗೂ ಮೋಹನ್ ಬೆಂಗ್ರೆ ಅವರು, ಪ್ರಸ್ತುತ ಸುಮಾರು 200 ಬೋಟ್ಗಳಿಗೆ ಡಾಕ್ ವ್ಯವಸ್ಥೆ ಇದ್ದು, ಫಲ್ಗುಣಿ ಮತ್ತು ನೇತ್ರಾವತಿ ನದಿಗಳು ಅರಬ್ಬಿ ಸಮುದ್ರ ಸೇರುವ ತ್ರಿವೇಣಿ ಸಂಗಮ ಪ್ರದೇಶದಲ್ಲಿ ಹೊಸ ಡಾಕ್ಗಳನ್ನು ನಿರ್ಮಿಸಿದರೆ ಹೆಚ್ಚಿನ ಬೋಟ್ಗಳಿಗೆ ನಿಲುಗಡೆ ವ್ಯವಸ್ಥೆ ಕಲ್ಪಿಸಬಹುದು ಎಂದು ತಿಳಿಸಿದರು.
ಇದಕ್ಕಾಗಿ ನದಿಗಳು ಹಾಗೂ ಅಳಿವೆ ಬಾಗಿಲಿನಲ್ಲಿ ಡ್ರೆಡ್ಜಿಂಗ್ ಮಾಡಬೇಕಿದ್ದು, ಸುಮಾರು 25 ವರ್ಷಗಳಿಂದ ಈ ಕಾಮಗಾರಿ ನಡೆದಿಲ್ಲ ಎಂದು ಅವರು ಮುಖ್ಯಮಂತ್ರಿಗೆ ವಿವರಿಸಿದರು.

ಬಂದರಿನ ತಟ ಪ್ರದೇಶದಲ್ಲಿ ಮರಳು ತುಂಬಿಕೊಂಡಿರುವುದರಿಂದ ಅದನ್ನು ತೆರವುಗೊಳಿಸಬೇಕು. ಆಳವಾದ ಪ್ರದೇಶಗಳನ್ನು ಗುರುತಿಸಲು ಚಾನಲ್ ಮಾರ್ಕಿಂಗ್ ಬಾಯ್ಗಳನ್ನು ಅಳವಡಿಸಿದರೆ ಬೋಟ್ಗಳ ಸಂಚಾರ ಮತ್ತಷ್ಟು ಸುಗಮವಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ವ್ಯಾಪಾರ ಸ್ಥಗಿತಕ್ಕೆ ಡಿಕೆಶಿ ಸಿಡಿಮಿಡಿ
ತಮ್ಮ ಭೇಟಿ ಹಿನ್ನೆಲೆಯಲ್ಲಿ ಬಂದರಿನಲ್ಲಿ ಮೀನುಗಾರರಿಗೆ ವ್ಯಾಪಾರ ಮಾಡಲು ಅವಕಾಶ ನೀಡದಿರುವುದನ್ನು ಗಮನಿಸಿದ ಡಿ.ಕೆ. ಶಿವಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದರು. ಯಾವುದೇ ಕಾರಣಕ್ಕೂ ವ್ಯಾಪಾರ ಚಟುವಟಿಕೆಗಳನ್ನು ಸ್ಥಗಿತಗೊಳಿಸಬಾರದು. ಇದರಿಂದ ಮೀನುಗಾರರು ಹಾಗೂ ವ್ಯಾಪಾರಿಗಳ ಜೀವನೋಪಾಯಕ್ಕೆ ತೊಂದರೆಯಾಗುತ್ತದೆ. ಕೂಡಲೇ ವ್ಯಾಪಾರ ಆರಂಭಿಸುವಂತೆ ಸೂಚಿಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಮ್ಮ ಭೇಟಿ ಸಂದರ್ಭದಲ್ಲಿ ಮಂಗಳೂರು ಬಂದರಿನ ಚಟುವಟಿಕೆಗಳು ಸ್ಥಗಿತಗೊಂಡಿದ್ದಕ್ಕೆ ಕಾರಣವೇನು ಎಂಬ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ ಎಂದು ಹೇಳಿದರು.
ಅಧಿಕಾರಿಗಳಿಂದಲೇ ಇದಕ್ಕೆ ಕಾರಣವಾಗಿದ್ದರೆ ಕ್ರಮ ಕೈಗೊಳ್ಳಲಾಗುವುದು. ಅಕ್ರಮಗಳನ್ನು ಮುಚ್ಚಿಡುವ ಉದ್ದೇಶದಿಂದ ಇಂತಹ ಕ್ರಮ ಕೈಗೊಂಡಿದ್ದರೆ ಸೂಕ್ತ ಕ್ರಮ ಜರುಗಿಸಲಾಗುವುದು. ಮೀನುಗಾರರು, ವರ್ತಕರು ಹಾಗೂ ದೋಣಿಗಳನ್ನೇ ಅವಲಂಬಿಸಿರುವ ಮೀನುಗಾರ ಸಮುದಾಯದ ವಾಸ್ತವ ಸ್ಥಿತಿಯನ್ನು ತಿಳಿದುಕೊಳ್ಳಲು ಬಂದಿದ್ದೇನೆ ಎಂದು ಅವರು ಹೇಳಿದರು.

ಅಕ್ರಮ ಕಾಂಪೌಂಡ್, ರಸ್ತೆ ನಿರ್ಬಂಧದ ವಿರುದ್ಧ ಕ್ರಮ
ದೇಶದ ವಿವಿಧ ಭಾಗಗಳಿಂದ ಮಂಗಳೂರಿಗೆ ವ್ಯಾಪಾರಕ್ಕಾಗಿ ಬರುವವರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಮೂಲಸೌಕರ್ಯಗಳು ಲಭ್ಯವಾಗಬೇಕು ಹಾಗೂ ವಾಹನ ಸಂಚಾರ ಸುಗಮವಾಗಿರಬೇಕು ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಬಂದರು ಪ್ರದೇಶದಲ್ಲಿ ರಸ್ತೆ ನಿರ್ಬಂಧಿಸಿರುವುದು ಹಾಗೂ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿರುವುದು ತಮ್ಮ ಗಮನಕ್ಕೆ ಬಂದಿದೆ. ಕಾನೂನು ಉಲ್ಲಂಘಿಸಿರುವವರು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಖಾಸಗಿ ಆಸ್ತಿಯಾಗಿದ್ದರೆ ದಾಖಲೆಗಳನ್ನು ಪರಿಶೀಲಿಸಿ, ಕಾನೂನಿನ ವ್ಯಾಪ್ತಿಯಲ್ಲಿ ಅಗತ್ಯ ಕ್ರಮ ಕೈಗೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಣ್ಣ ಮೀನುಗಾರರು ಬೋಟ್ಗಳನ್ನು ನಿಲ್ಲಿಸುವ ವಿಚಾರದಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಮೀನುಗಾರ ಸಮುದಾಯಕ್ಕೆ ಪ್ರತ್ಯೇಕ ವಿಶ್ವವಿದ್ಯಾಲಯ
ಮೀನುಗಾರ ಸಮುದಾಯ ದೊಡ್ಡ ಸಮುದಾಯವಾಗಿದ್ದು, ವಿವಿಧ ವರ್ಗಗಳ ಜನರು ಸೌಹಾರ್ದತೆಯಿಂದ ಇಲ್ಲಿ ಕೆಲಸ ಮಾಡುತ್ತಿದ್ದಾರೆ. ಇದು ಆರ್ಥಿಕ ಶಕ್ತಿಕೇಂದ್ರವೂ ಆಗಿದೆ. ಈ ಸಮುದಾಯಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುವ ಅಗತ್ಯವಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಮೀನುಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ವಿಶ್ವವಿದ್ಯಾಲಯ ಸ್ಥಾಪನೆ ಮಾಡುವ ಚಿಂತನೆ ಇದೆ. ಪ್ರಸ್ತುತ ಇರುವ 40–50 ಸೀಟುಗಳ ಸಂಖ್ಯೆಯನ್ನು 200ಕ್ಕೆ ಹೆಚ್ಚಿಸುವುದು, ಶಿಕ್ಷಣ, ಸಮುದ್ರ ಮೆಟ್ರೋ ಹಾಗೂ ನೀಲಿ ಆರ್ಥಿಕತೆಗೆ ಒತ್ತು ನೀಡುವ ಕುರಿತು ಸರ್ಕಾರ ತೀರ್ಮಾನಿಸಿದೆ ಎಂದು ಹೇಳಿದರು.

ಮೂಲಸೌಕರ್ಯಕ್ಕೆ ₹16 ಸಾವಿರ ಕೋಟಿ
ಅಭಿವೃದ್ಧಿಗಾಗಿ ಈಗಾಗಲೇ ₹32 ಸಾವಿರ ಕೋಟಿ ಮೊತ್ತ ಘೋಷಿಸಲಾಗಿದೆ. ಇದರಲ್ಲಿ ಗ್ರಾಮೀಣ ಭಾಗಗಳ ರಸ್ತೆ, ನೀರು ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ₹16 ಸಾವಿರ ಕೋಟಿ ಮೀಸಲಿಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.
ಮಂಗಳೂರು ಮತ್ತು ಕಾರವಾರ ಸೇರಿದಂತೆ ಕರಾವಳಿ ಭಾಗಗಳಲ್ಲಿ ಎಲ್ಲಿ ಎಲ್ಲಿ ವ್ಯಾಪಾರ ವಹಿವಾಟು ನಡೆಯುತ್ತಿದೆ ಎಂಬುದರ ಕುರಿತು ಸಮಗ್ರ ವರದಿ ಪಡೆದು, ಸಮುದ್ರದಂಚಿನ ಮೀನುಗಾರ ಕುಟುಂಬಗಳಿಗೆ ಅಗತ್ಯ ತಾಂತ್ರಿಕ ನೆರವು ಒದಗಿಸಲು ಯೋಜನೆ ರೂಪಿಸಲಾಗುವುದು ಎಂದರು.
ಮೀನುಗಾರರು ನೇರವಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಸಾಧ್ಯವಾಗದಿದ್ದರೆ ಗುಪ್ತ ವರದಿ ಮೂಲಕವೂ ಮಾಹಿತಿ ಪಡೆಯಲಾಗುವುದು. ಯಾವುದೇ ಮಾಫಿಯಾ ಅಥವಾ ಇತರ ರೀತಿಯ ತೊಂದರೆಗಳಿವೆಯೇ ಎಂಬುದನ್ನು ಪರಿಶೀಲಿಸಲಾಗುವುದು. ನ್ಯಾಯಬದ್ಧವಾಗಿ ವ್ಯಾಪಾರ ವಹಿವಾಟು ನಡೆಯಬೇಕು ಹಾಗೂ ಮೀನುಗಾರ ಸಮುದಾಯ ಅಭಿವೃದ್ಧಿಯಾಗಬೇಕು ಎಂಬುದು ಸರ್ಕಾರದ ಗುರಿ ಎಂದು ಹೇಳಿದರು.
ಅಳಿವೆಬಾಗಿಲು ಡ್ರೆಡ್ಜಿಂಗ್ಗೆ ಕ್ರಮ
ಅಳಿವೆಬಾಗಿಲಿನಲ್ಲಿ ಸುಮಾರು 35 ವರ್ಷಗಳಿಂದ ಹೂಳೆತ್ತದ ಕಾರಣ ಅಪಾಯಕಾರಿಯಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಷಯ ತಮ್ಮ ಗಮನಕ್ಕೆ ಬಂದಿದೆ ಎಂದರು.
ಹೂಳನ್ನು ಸಮುದ್ರಕ್ಕೆ ಬಿಡಬೇಕೇ ಅಥವಾ ಪ್ರದೇಶವನ್ನು ಮತ್ತಷ್ಟು ವಿಸ್ತರಿಸಬೇಕೇ ಎಂಬ ಕುರಿತು ವಿವಿಧ ಸಲಹೆಗಳು ಬಂದಿವೆ. ಕೇಂದ್ರದ ತಾಂತ್ರಿಕ ಸಮಿತಿಯಿಂದಲೂ ಸಲಹೆ ಪಡೆಯಬೇಕಿದೆ. ಈ ಬಗ್ಗೆ ಅಗತ್ಯ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಹೂಳೆತ್ತುವ ಕಾಮಗಾರಿಗೆ ಗುತ್ತಿಗೆ ಅಥವಾ ಲೀಸ್ ವ್ಯವಸ್ಥೆ ಮಾಡಬೇಕೇ, ಅಥವಾ ಸರ್ಕಾರವೇ ಯಂತ್ರೋಪಕರಣ ಹಾಗೂ ದೋಣಿಗಳನ್ನು ಖರೀದಿಸಿ ಕಾಮಗಾರಿ ನಡೆಸಬೇಕೇ ಎಂಬುದನ್ನು ಪರಿಶೀಲಿಸಲಾಗುವುದು. ಹಿಂದೆ ಸರ್ಕಾರದಿಂದಲೇ ಹೂಳೆತ್ತುವ ವ್ಯವಸ್ಥೆ ಇತ್ತು, ಇದೀಗ ಅದು ಇಲ್ಲ ಎಂದು ಹೇಳಿದರು.
‘ಕರಾವಳಿ ಕರ್ನಾಟಕ ಮಾತ್ರವಲ್ಲ, ದೇಶದ ಸಂಪತ್ತು’
ಕರಾವಳಿ ಕರ್ನಾಟಕದ ಸಂಪತ್ತು ಮಾತ್ರವಲ್ಲ, ರಾಷ್ಟ್ರದ ಸಂಪತ್ತೂ ಆಗಿದೆ. ಅದನ್ನು ಸಂರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಮಂಗಳೂರಿನ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗುತ್ತಿದೆ. ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಲಿದೆ. ಈ ನಿಟ್ಟಿನಲ್ಲಿ 3–4 ಹೊಸ ನೀತಿಗಳನ್ನು ಜಾರಿಗೆ ತರುವ ಕುರಿತು ಚಿಂತನೆ ನಡೆದಿದೆ ಎಂದರು.
ಕರಾವಳಿಯಲ್ಲಿ ಹೂಡಿಕೆದಾರರಿಗೆ ಪ್ರೋತ್ಸಾಹ ನೀಡಬೇಕು. ಹೊಸ ಹೂಡಿಕೆಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಹೂಡಿಕೆದಾರರಿಗೆ ಉತ್ತಮ ವಸತಿ ವ್ಯವಸ್ಥೆ ಕಲ್ಪಿಸಲು ಸೂಕ್ತ ಜಾಗಗಳನ್ನು ಗುರುತಿಸಿ, ಕಾನೂನಿನ ಚೌಕಟ್ಟಿನಲ್ಲಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.
ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಮೀನು ತಿನ್ನಲು ಮಂಗಳೂರಿಗೆ ಹೋಗಿದ್ದಾರೆ ಎಂದು ಟೀಕಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ತಾನು ಹಲವು ವರ್ಷಗಳಿಂದ ಮೀನು ತಿನ್ನುವುದನ್ನು ಬಿಟ್ಟಿದ್ದೇನೆ. ಸರ್ಕಾರ ಕರಾವಳಿ ಅಭಿವೃದ್ಧಿಯ ಬಗ್ಗೆ ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.

ತುಳು ಭಾಷೆ ಕರಾವಳಿಯ ಹೆಮ್ಮೆ
ತುಳು ಭಾಷೆಯನ್ನು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಿಸಿರುವ ಕುರಿತು ಮಾತನಾಡಿದ ಡಿ.ಕೆ. ಶಿವಕುಮಾರ್, ತುಳು ಭಾಷೆ ಕರಾವಳಿ ಭಾಗದ ಜನರ ಹೆಮ್ಮೆ. ಇದು ಈ ಭಾಗದ ಜನರ ಬಹುದಿನಗಳ ನಿರೀಕ್ಷೆಯಾಗಿತ್ತು. ಎಲ್ಲ ಪಕ್ಷಗಳ ನಾಯಕರು ಕೂಡ ಇದನ್ನು ಬಯಸಿದ್ದರು. ಹೀಗಾಗಿ ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ ನಡೆಸಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕಸ್ತೂರಿ ರಂಗನ್ ವಿಚಾರದಲ್ಲಿ ಜನಾಭಿಪ್ರಾಯ ಸಂಗ್ರಹ
ಕಸ್ತೂರಿ ರಂಗನ್ ವರದಿ ವಿಚಾರವಾಗಿ ತೀರ್ಥಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಈ ವಿಚಾರ ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ ಎಂದರು.
ಅಧಿವೇಶನದಲ್ಲಿ ಚರ್ಚೆ ನಡೆಸುವ ಮುನ್ನ ಸಂಬಂಧಿಸಿದ ಪ್ರದೇಶಗಳ ಜನರ ಅಭಿಪ್ರಾಯ ಸಂಗ್ರಹಿಸಲು ಭೇಟಿ ನೀಡುತ್ತಿದ್ದೇನೆ. ಜನರ ಅಭಿಪ್ರಾಯ ಪಡೆದ ಬಳಿಕ ಕೇಂದ್ರದ ಅಧಿಸೂಚನೆ ಕುರಿತು ಸರ್ಕಾರದ ಮುಂದಿನ ನಿಲುವು ನಿರ್ಧರಿಸಲಾಗುವುದು. ಜನರ ಬದುಕು ಮುಖ್ಯವಾಗಿದ್ದು, ಕಾನೂನಿನ ಚೌಕಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳಿಗೆ ಹಣವಿಲ್ಲ ಎಂಬ ಆರೋಪಗಳ ನಡುವೆಯೂ ಸಚಿವ ಸಂಪುಟದ ಹೊಸ ಯೋಜನೆಗಳಿಗೆ ಹಣ ಹೇಗೆ ಹೊಂದಿಸಲಾಗುತ್ತದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾವು ನುಡಿದಂತೆ ನಡೆಯುತ್ತೇವೆ. ಅದೇ ನಮ್ಮ ಶಕ್ತಿ” ಎಂದು ಹೇಳಿದರು.











