ಹುಬ್ಬಳ್ಳಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿ ಶೂನ್ಯ ಸಾಧನೆ ಮಾಡಿದ ಕಾಂಗ್ರೆಸ್ ಪಕ್ಷ ಇನ್ನಾದರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ರಾಜ್ಯದ ಆರ್ಥಿಕ ವ್ಯವಸ್ಥೆಗೆ ಗ್ಯಾರಂಟಿ ಹೊಣೆಯೆ?
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ರಾಜ್ಯದ ಕಾಂಗ್ರೆಸ್ ನಾಯಕರು ಹೇಗೆ ವರ್ತಿಸುತ್ತಿದ್ದಾರೆ ಎಂಬುದನ್ನು ಜನ ಗಮನಿಸುತ್ತಿದ್ದಾರೆ. ದೆಹಲಿ ಫಲಿತಾಂಶದ ಆಧಾರದಲ್ಲಿ ಪಕ್ಷ ತನ್ನ ಸ್ಥಿತಿಗತಿ ಪರಿಶೀಲಿಸಬೇಕು. ರಾಜ್ಯದ ಆರ್ಥಿಕ ವ್ಯವಸ್ಥೆ ಹಾಗೂ ಅಭಿವೃದ್ಧಿಯನ್ನು ಗ್ಯಾರಂಟಿಗಳ ಹೆಸರಿನಲ್ಲಿ ಹಾಳು ಮಾಡಿರುವ ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕದ ಜನರು ಕೂಡ ತಕ್ಕ ಪಾಠ ಕಲಿಸಲಿದ್ದಾರೆ,” ಎಂದು ಹೇಳಿದರು.
ಮೋದಿಯ ನೇತೃತ್ವಕ್ಕೆ ಮತದಾರರ ಬೆಂಬಲ
“ದೆಹಲಿಯ ಮತದಾರರು ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಗುರುತಿಸಿ ಮತ ಹಾಕಿದ್ದಾರೆ. ಭ್ರಷ್ಟಾಚಾರವನ್ನು ಸೋಲಿಸಿ, ಅಭಿವೃದ್ಧಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ಮೂಲೆಗೆ ತಳ್ಳಲ್ಪಟ್ಟಿದೆ. ಇದರಿಂದ ದೇಶದ ರಾಜಕೀಯ ದಿಕ್ಕು ಸ್ಪಷ್ಟವಾಗುತ್ತದೆ,” ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ಬಿಜೆಪಿ ಬಿಕ್ಕಟ್ಟು ತೀರುತ್ತದೆ
ಬಿಜೆಪಿಯಲ್ಲಿ ನಡೆಯುತ್ತಿರುವ ಆಂತರಿಕ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಲು ಅವರು ನಿರಾಕರಿಸಿದರು. “ನಾನು ಅದರ ಬಗ್ಗೆ ಮಾತನಾಡುವುದರಿಂದ ತಪ್ಪಾಗಬಹುದು. ಸ್ನೇಹಿತರೆಲ್ಲಾ ಸರಿ ಮಾಡಿಕೊಂಡರೆ ಒಳ್ಳೆಯದು. ಬಿಜೆಪಿಯು ರಾಷ್ಟ್ರೀಯ ಪಕ್ಷವಾಗಿದ್ದು, ಬಲಿಷ್ಠ ನಾಯಕತ್ವವನ್ನು ಹೊಂದಿದೆ. ಶೀಘ್ರದಲ್ಲಿಯೇ ಎಲ್ಲವೂ ಸರಿಯಾಗುತ್ತದೆ ಎಂಬ ನಿರೀಕ್ಷೆ ಇದೆ,” ಎಂದರು.
ಕಾಂಗ್ರೆಸ್ ನಿಂದ ಅಕ್ರಮ ಆಸ್ತಿಯ ವಶಪಡಿಸಿಕೆ – ಕಾನೂನು ಕ್ರಮ
ಹುಬ್ಬಳ್ಳಿಯಲ್ಲಿ ಅವಿಭಜಿತ ಜನತಾದಳ (ಜೆಡಿಎಸ್ ಮತ್ತು ಜೆಡಿಯು) ಆಸ್ತಿಯನ್ನು ಕಾಂಗ್ರೆಸ್ ಪಕ್ಷ ಅಕ್ರಮವಾಗಿ ವಶಪಡಿಸಿಕೊಂಡಿರುವ ಆರೋಪವನ್ನು ತೀವ್ರವಾಗಿ ಖಂಡಿಸಿದ ಕುಮಾರಸ್ವಾಮಿ, “ಕಾಂಗ್ರೆಸ್ ನಾಯಕರು ಅಧಿಕಾರದ ಮಾಡದಿಂದ ಮೆರೆಯುತ್ತಿದ್ದಾರೆ. ಈ ಬಗ್ಗೆ ದಾಖಲೆಗಳನ್ನು ಪರಿಶೀಲಿಸುತ್ತೇನೆ. ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು,” ಎಂದು ಸ್ಪಷ್ಟಪಡಿಸಿದರು.