ಬೆಳಗಾವಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬೆನ್ನು ಹಾಗೂ ಮುಖಕ್ಕೆ ಗಾಯವಾಗಿದ್ದು, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ತಲೆಗೆ ಗಾಯವಾಗಿದೆ. ಸಚಿವೆ ಸಮೀಪದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಶಾಸಕಾಂದ ಪಕ್ಷದ ಸಭೆ ಮುಗಿಸಿಕೊಂಡು ಸೋಮವಾರ ತಡರಾತ್ರಿ ಬೆಂಗಳೂರಿನಿಂದ ರಸ್ತೆ ಮಾರ್ಗವಾಗಿ ಬರುತ್ತಿದ್ದಾಗ ಮಂಗಳವಾರ ಬೆಳಗ್ಗೆ 6 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರಿನಲ್ಲಿ ಶಾಸಕಾಂಗ ಪಕ್ಷದ ಸಭೆಯನ್ನು ಮುಗಿಸಿದ್ದ ಸಚಿವೆ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಕಾರಿನಲ್ಲಿ ತಡರಾತ್ರಿ ಬೆಳಗಾವಿಗೆ ಹೊರಟಿದ್ದರು. ಅಂಬಡಗಟ್ಟಿ ಗ್ರಾಮದ ಬಳಿ ಕಾರು ಸಂಚರಿಸುವಾಗ ರಸ್ತೆಯಲ್ಲಿ ಶ್ವಾನವೊಂದು ಅಡ್ಡಿ ಬಂದಿದ್ದು, ಅದನ್ನು ತಪ್ಪಿಸಲು ಯತ್ನಿಸಿದಾಗ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ.ಬೆಳಗಾವಿ ನಗರದ ವಿಜಯ ಆಸ್ಪತ್ರೆಯಲ್ಲಿ ಸಚಿವೆ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮಾತನಾಡಿ, ” ರಸ್ತೆ ಮಧ್ಯೆ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಅಮ್ಮನಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾವ ಚನ್ನರಾಜ ಹಟ್ಟಿಹೊಳಿ ಕೂಡ ಕಾರಿನಲ್ಲಿದ್ದು ಅವರ ತಲೆಗೆ ಪೆಟ್ಟಾಗಿದೆ. ಅದೃಷ್ಟವಶಾತ್ ಹೆಚ್ಚಿನ ಹಾನಿಯಾಗಿಲ್ಲ. ಕ್ಷೇತ್ರದ ಜನರ ಆಶೀರ್ವಾದದಿಂದ ನಮ್ಮ ಅಮ್ಮ ದೊಡ್ಡ ಅಪಾಯದಿಂದ ಪಾರಾಗಿದ್ದಾರೆ. ಅಭಿಮಾನಿಗಳು, ಕ್ಷೇತ್ರದ ಮತದಾರರು ಯಾರೂ ಆತಂಕ ಪಡಬೇಕಿಲ್ಲ. ಶೀಘ್ರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ” ಎಂದು ಹೇಳಿದರು.
ಲಕ್ಷ್ಮೀ ಹೆಬ್ಬಾಳ್ಕರ್ ಅವರು ಆಸ್ಪತ್ರೆಯ ಸ್ಟ್ರೆಚರ್ ಮೇಲೆ ಮಲಗಿರುವ ಫೋಟೋ ಹಾಗೂ ವಿಡಿಯೋಗಳು ಟ್ವೀಟರ್, ಫೇಸ್ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
Discover more from amiroNEWS
Subscribe to get the latest posts sent to your email.